ಮಹಾರಾಷ್ಟ್ರ: ಚುನಾವಣೆ ಸೋಲಿನ ಹೊಣೆಹೊತ್ತ ಫಡಣವಿಸ್‌; ಸ್ಥಾನ ತೊರೆಯಲು ಇಂಗಿತ ಮುಂಬೈ: ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಸರ್ಕಾರದ ಜವಾಬ್ದಾರಿಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಬಿಜೆಪಿ ನಾಯಕತ್ವಕ್ಕೆ ಕೋರುವುದಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಬುಧವಾರ ಹೇಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿದ ಬೆನ್ನಲ್ಲೇ, ಫಡಣವೀಸ್ ಅವರ ಈ ಹೇಳಿಕೆ ಹೊರಬಿದ್ದಿದೆ. ಮುಂಬೈನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಮಧ್ಯೆ ಸಹಕಾರ ಮತ್ತು ಹೊಂದಾಣಿಕೆಯಂಥ ಕೆಲವು ಸಮಸ್ಯೆಗಳು ಇರುವುದನ್ನು ಒಪ್ಪಿಕೊಂಡರು. ಶೀಘ್ರವೇ ಸಭೆ ನಡೆಸಿ, ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವುದಾಗಿಯೂ ತಿಳಿಸಿದರು. ‘ರಾಜ್ಯದಲ್ಲಿ ಬಿಜೆಪಿಯ ಸೋಲಿನ ಹೊಣೆಯನ್ನು ಸಂಪೂರ್ಣವಾಗಿ ನಾನೇ ಹೊತ್ತುಕೊಳ್ಳುತ್ತೇನೆ. ಕೆಲವು ಪ್ರದೇಶಗಳಲ್ಲಿ ಪ್ರಚಾರ ನಡೆಸಲು ನನ್ನಿಂದ ಸಾಧ್ಯವಾಗಲಿಲ್ಲ. ನನ್ನದೇ ತಪ್ಪಿನಿಂದಾಗಿ ರಾಜ್ಯದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸಬೇಕಿದೆ. ಹೀಗಾಗಿ ನನ್ನನ್ನು ಸರ್ಕಾರದ ಜವಾಬ್ದಾರಿಗಳಿಂದ ಬಿಡುಗಡೆಗೊಳಿಸಬೇಕು ಎಂದು ನನ್ನ ಪಕ್ಷದ ಹಿರಿಯ ನಾಯಕರನ್ನು ಕೋರಿಕೊಳ್ಳುತ್ತೇನೆ. ಈ ನಿಟ್ಟಿನಲ್ಲಿ ನನ್ನ ಹಿರಿಯ ನಾಯಕರನ್ನು ಭೇಟಿಯಾಗಿ, ಸಮಾಲೋಚನೆ ನಡೆಸುತ್ತೇನೆ. ಅಲ್ಲದೆ, ಅವರ ಸಲಹೆ ಮತ್ತು ಸೂಚನೆಗಳನ್ನು ಪಾಲಿಸುತ್ತೇನೆ’ ಎಂದು ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.