ಅಬಕಾರಿ ನೀತಿ ಹಗರಣ: ರೆಗ್ಯುಲರ್ ಜಾಮೀನು ಕೋರಿ ಕೇಜ್ರಿವಾಲ್ ಅರ್ಜಿ ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರೆಗ್ಯುಲರ್ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಸುಪ್ರೀಂ ಕೋರ್ಟ್‌ ನೀಡಿರುವ ಮಧ್ಯಂತರ ಜಾಮೀನು ಜೂನ್‌ 1ಕ್ಕೆ ಕೊನೆಗೊಳ್ಳಲಿದೆ. ಕೇಜ್ರಿವಾಲ್ ಸಲ್ಲಿಸಿರುವ ರೆಗ್ಯುಲರ್ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ನೋಟಿಸ್ ಜಾರಿಗೆ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಆದೇಶಿಸಿದ್ದಾರೆ. ಇ.ಡಿ. ಅಧಿಕಾರಿಗಳು ಜೂನ್ 1ರಂದು ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ. ವಿಚಾರಣೆಯನ್ನು ಕೋರ್ಟ್ ಶನಿವಾರಕ್ಕೆ ನಿಗದಿಪಡಿಸಿದೆ. ಮಧ್ಯಂತರ ಜಾಮೀನಿನ ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸಬೇಕು ಎಂಬ ಕೋರಿಕೆ ಇದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಿ ನಿರಾಕರಿಸಿದ ನಂತರ ಕೇಜ್ರಿವಾಲ್ ಅವರು ರೌಜ್ ಅವಿನ್ಯು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಇ.ಡಿ. ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಕೋರಿದರು. ‘ಕೇಜ್ರಿವಾಲ್ ಅವರಿಗೆ ಆರೋಗ್ಯವು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುವುದು ಯಾವುದೇ ಅಡ್ಡಿ ಸೃಷ್ಟಿಸುವುದಿಲ್ಲ. ನಮಗೆ ಹೆಚ್ಚಿನ ಸಮಯ ಸಿಗದೆ ಇರಲಿ ಎಂಬ ಕಾರಣಕ್ಕೆ ಅವರು ಕೊನೆಯ ದಿನ ಜಾಮೀನು ಅರ್ಜಿ ಸಲ್ಲಿಸುತ್ತಾರೆ’ ಎಂದು ರಾಜು ಹೇಳಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.