ಪುರಿ ಜಗನ್ನಾಥ ದೇಗುಲ ಜಾತ್ರೆ ವೇಳೆ ಪಟಾಕಿ ಸ್ಫೋಟ; ಮೃತರ ಸಂಖ್ಯೆ 4ಕ್ಕೆ ಏರಿಕೆ ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇಗುಲದ ಚಂದನ ಜಾತ್ರಾ ಮಹೋತ್ಸವ ವೇಳೆ ಸಂಭವಿಸಿದ್ದ ಪಟಾಕಿ ಸ್ಫೋಟದಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಸಂಜೆ ಜಗನ್ನಾಥ ಪುರಿ ದೇಗುಲದಲ್ಲಿ ಚಂದನ ಜಾತ್ರಾ ಮಹೋತ್ಸವ ನಡೆದಿತ್ತು. ಭಕ್ತರ ಗುಂಪೊಂದು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿತ್ತು. ಈ ವೇಳೆ ಮರದ ತುಂಡೊಂದು ಪಟಾಕಿ ರಾಶಿಗೆ ಬಿದ್ದು ಸ್ಫೋಟ ಸಂಭವಿಸಿತ್ತು. ಅವಘಡದಲ್ಲಿ ಅಪ್ರಾಪ್ತ ಬಾಲಕ ಸೇರಿದಂತೆ ಮೂರು ಮಂದಿ ಮೃತಪಟ್ಟಿದ್ದರು. ಸುಮಾರು 33 ಮಂದಿ ಗಾಯಗೊಂಡಿದ್ದರು. ಇಂದು (ಶುಕ್ರವಾರ) ಮತ್ತೊಬ್ಬ ಗಾಯಾಳು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಉಳಿದ 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿಯ ಹೇಳಿಕೆ ತಿಳಿಸಿದೆ. ಘಟನೆ ಸಂಬಂಧ ತನಿಖೆ ನಡೆಸುವಂತೆ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಆದೇಶಿಸಿದ್ದಾರೆ. ಮೃತ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಏತನ್ಮಧ್ಯೆ, ಪುರಿ ಪೊಲೀಸರು ಸ್ವಯಂ ಪ್ರೇರಿತ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.