ಕಾಶ್ಮೀರ: ಸೇನಾ ಸಿಬ್ಬಂದಿ ಥಳಿತ, ನಾಲ್ವರು ಪೊಲೀಸರಿಗೆ ಗಂಭೀರ ಗಾಯ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿ ಥಳಿಸಿದ್ದರಿಂದ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮಂಗಳವಾರ ತಡರಾತ್ರಿ ಸೇನಾ ಸಿಬ್ಬಂದಿ ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ ಎನ್ನಲಾಗಿದೆ. ಕುಪ್ವಾರಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಗಳಾದ ರಯೀಸ್ ಖಾನ್, ಇಮ್ತಿಯಾಜ್ ಮಲಿಕ್ ಸೇರಿದಂತೆ ಕಾನ್‌ಸ್ಟೆಬಲ್‌ಗಳಾದ ಸಲೀಮ್ ಮುಷ್ತಾಕ್, ಜಹೂರ್ ಅಹಮದ್‌ ಅವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಸೌರಾದ ಎಸ್‌ಕೆಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣವೊಂದರ ತನಿಖೆ ಭಾಗವಾಗಿ ಕುಪ್ವಾರದ ಬಟ್‌ಪೋರಾದಲ್ಲಿರುವ ಸ್ಥಳೀಯ ಪ್ರಾದೇಶಿಕ ಸೇನಾಧಿಕಾರಿಯ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಇದರಿಂದ ಆಕ್ರೋಶಗೊಂಡ ಸೇನಾ ಸಿಬ್ಬಂದಿಯು ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ಥಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆದ ನಂತರವಷ್ಟೇ ಪ್ರತಿಕ್ರಿಯಿಸುವುದಾಗಿ ಶ್ರೀನಗರದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.