ಪ್ರಧಾನಿ ಮೋದಿಗೆ ನಾನು ಹನುಮನ ರೀತಿ ಇರುವೆ: ಚಿರಾಗ್ ಪಾಸ್ವಾನ್ ಬೆಂಗಳೂರು: ಪ್ರಧಾನಿ ಮೋದಿ ಅವರಿಗೆ ನಾನು ಹನುಮಂತನ ರೀತಿ ನಿಷ್ಠೆಯಿಂದ ಇರುತ್ತೇನೆ. ಹಾಗಾಗಿ ವಿರೋಧ ಪಕ್ಷದವರು ನನ್ನ ಬಳಿ ಬರಲು ಹತ್ತು ಬಾರಿ ಯೋಚಿಸಬೇಕು ಎಂದು ಬಿಹಾರದ ಎಲ್.ಜೆ.ಪಿ ನಾಯಕ ಹಾಗೂ ಸಂಸದ ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು ಪರೋಕ್ಷವಾಗಿ ಇಂಡಿಯಾ ಒಕ್ಕೂಟಕ್ಕೆ ಎಚ್ಚರಿಕೆ ನೀಡಿದ್ದಾರೆ. ನನ್ನ ಶ್ರದ್ಧೆ, ಭಕ್ತಿ, ನಿಷ್ಠೆ ಏನೇ ಇದ್ದರೂ ಅದು ಪ್ರಧಾನಿ ಮೋದಿ ಅವರಿಗೆ ಮಾತ್ರ. ವಿರೋಧ ಪಕ್ಷದವರು ಇದನ್ನು ತಿಳಿದುಕೊಳ್ಳಬೇಕು ಎಂದು ಚಾಟಿ ಬೀಸಿದ್ದಾರೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಮೋದಿ ಅವರ ಕೈ ಬಲಪಡಿಸುವುದು ನನ್ನ ಉದ್ದೇಶ. ಸಚಿವ ಸ್ಥಾನ ಕೊಟ್ಟರೂ ಸರಿ, ಕೊಡದಿದ್ದರೂ ಸರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ರಾತ್ರಿ 7.15ಕ್ಕೆ ನಡೆಯುವ ಸಮಾರಂಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ಮೈತ್ರಿ ಸರ್ಕಾರದ ಸಂಪುಟಕ್ಕೆ ಸುಮಾರು 30 ಮಂದಿ ಸೇರ್ಪಡೆಯಾಗಲಿದ್ದಾರೆ. ಮೊದಲ ಹಂತದಲ್ಲಿ ಮಿತ್ರ ಪಕ್ಷಗಳ 12ರಿಂದ 15 ಸದಸ್ಯರು ಸಂಪುಟಕ್ಕೆ ಸೇರುವ ಸಂಭವ ಇದೆ. ಚಿರಾಗ್‌ ಪಾಸ್ವಾನ್‌ ನೇತೃತ್ವದ ಎಲ್‌ಜೆಪಿ ಸಹ ಎರಡು ಖಾತೆಗಳನ್ನು ಪಡೆಯಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.