ಭಯೋತ್ಪಾದನೆ ನಿಗ್ರಹಿಸುವಲ್ಲಿ ಎಸ್‌.ಪಿ, ಕಾಂಗ್ರೆಸ್‌ ನಿರ್ಲಕ್ಷ್ಯ: ಯೋಗಿ ಬಲಿಯಾ: ಮತಬ್ಯಾಂಕ್‌ ಮತ್ತು ಓಲೈಕೆಯ ರಾಜಕಾರಣಕ್ಕಾಗಿ ಹಿಂದಿನ ಸಮಾಜವಾದಿ ಪಕ್ಷ (ಎಸ್‌ಪಿ) ಹಾಗೂ ಕಾಂಗ್ರೆಸ್‌ ಪಕ್ಷದ ಸರ್ಕಾರಗಳು ಭಯೋತ್ಪಾದನೆಯನ್ನು ದಮನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದವು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶನಿವಾರ ಆರೋಪಿಸಿದರು. ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯ ಮನಿಯರ್‌ನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಸಮಾಜವಾದಿ ಪಕ್ಷ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಕಾಶಿ, ಅಯೋಧ್ಯೆ ಮತ್ತು ಲಖನೌನಲ್ಲಿ ಬಾಂಬ್‌ ಸ್ಫೋಟಗಳು ನಡೆದಿದ್ದವು’ ಎಂದು ಹೇಳಿದರು. ‘ಕಾಂಗ್ರೆಸ್‌ ಸರ್ಕಾರವು ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಂಡಿರಲಿಲ್ಲ’ ಎಂದು ಟೀಕಿಸಿದರು. ‘ಜೂನ್‌ 4 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿಯು ಮೂರನೇ ಬಾರಿ ಅಧಿಕಾರಕ್ಕೇರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ‘ದೆಹಲಿಯ ಸಿಂಹಾಸನದಲ್ಲಿ ರಾಮಭಕ್ತ ಮಾತ್ರ ಆಸೀನರಾಗಬೇಕೆಂಬ ಘೋಷವಾಕ್ಯ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ, ಅಸ್ಸಾಂನ ಕಾಮರೂಪದಿಂದ ಗುಜರಾತ್‌ನ ಕಚ್‌ವರೆಗೂ ಮೊಳಗುತ್ತಿದೆ’ ಎಂದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.