ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ ಕೋರ್ಟ್‌ ತರಾಟೆ ನವದೆಹಲಿ: ಜಾಮೀನು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ಸಂಗತಿಯನ್ನು ಮುಚ್ಚಿಟ್ಟಿದ್ದಕ್ಕೆ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕೋರ್ಟ್‌ ಅಸಮಾಧಾನಕ್ಕೆ ಗುರಿಯಾದ ಸೊರೇನ್ ಅವರು ಇ.ಡಿ ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿದ್ದ ಅರ್ಜಿಯನ್ನು ಹಿಂಪಡೆದರು. ಅರ್ಜಿಯನ್ನು ಹಿಂದಕ್ಕೆ ಪಡೆಯಲು ಸೊರೇನ್ ಪರ ವಕೀಲ ಕಪಿಲ್ ಸಿಬಲ್ ಅವರಿಗೆ ಅವಕಾಶ ನೀಡಿದ ನ್ಯಾಯಮೂರ್ತಿಗಳಾದ ದೀಪಾಂಕರ್ ದತ್ತ ಮತ್ತು ಸತೀಶ್ ಚಂದ್ರ ಶರ್ಮ ಅವರು ಇದ್ದ ವಿಭಾಗೀಯ ಪೀಠವು, ಪ್ರಕರಣದ ವಿವರಗಳನ್ನು ಪರಿಶೀಲಿಸಲು ನ್ಯಾಯಾಲಯ ಮುಂದಾದರೆ ಸೊರೇನ್‌ ಅವರಿಗೇ ತೊಂದರೆ ಆಗುತ್ತದೆ ಎಂದು ಎಚ್ಚರಿಕೆ ನೀಡಿತು. ‘ನಿಮ್ಮ ನಡತೆಯು ಬಹಳಷ್ಟನ್ನು ಹೇಳುತ್ತಿದೆ. ನಿಮ್ಮ ಕಕ್ಷಿದಾರರು ಕಪಟತನವನ್ನು ಬಿಟ್ಟು ಬರುತ್ತಾರೆ ಎಂದು ನಾವು ನಿರೀಕ್ಷಿಸಿದ್ದೆವು. ಆದರೆ ನೀವು ವಾಸ್ತವವನ್ನು ಮುಚ್ಚಿಡುವ ಕೆಲಸ ಮಾಡಿದಿರಿ’ ಎಂದು ನ್ಯಾಯಪೀಠವು ಸಿಬಲ್ ಅವರನ್ನು ಉದ್ದೇಶಿಸಿ ಹೇಳಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.