T20 | ಸಂಜು ನನ್ನ ಕ್ಷೇತ್ರ ಪ್ರತಿನಿಧಿಸುತ್ತಿರುವುದಕ್ಕೆ ಸಂತಸವಾಗಿದೆ: ತರೂರ್ ತಿರುವನಂತಪುರ: ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡುವ ಭಾರತ ತಂಡದಲ್ಲಿ ವಿಕೆಟ್‌ ಕೀಪರ್ ಸಂಜು ಸ್ಯಾಮ್ಸನ್ ಸ್ಥಾನ ಗಳಿಸಿದ್ದಾರೆ. ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಸಂಸದ ಶಶಿ ತರೂರ್, ‘ಟಿ20 ವಿಶ್ವಕಪ್ ಟೂರ್ನಿಗಾಗಿ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿದ್ದಕ್ಕಾಗಿ ಬಿಸಿಸಿಐ ಆಯ್ಕೆದಾರರಿಗೆ ಅಭಿನಂದನೆಗಳು. ಅಂತಿಮವಾಗಿ ಸಂಜು ಸ್ಯಾಮ್ಸನ್ ಅವರು ವಿಶ್ವಕಪ್‌ನಲ್ಲಿ ನನ್ನ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದು ಸಂತಸ ಮೂಡಿಸಿದೆ. ಟೀಮ್ ಇಂಡಿಯಾವು ಟ್ರೋಫಿಯನ್ನು ಮರಳಿ ತರುತ್ತದೆ’ ಎಂದು ಬರೆದುಕೊಂಡಿದ್ದಾರೆ. @ #T20WorldCup2024. @ - ! !! ಪ್ರಸಕ್ತ ಐಪಿಎಲ್‌ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್‌ ತಂಡವು ಉತ್ತಮ ಪ್ರದರ್ಶನ ನೀಡುತ್ತಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಜತೆಗೆ, ಸಂಜು ಸ್ಯಾಮ್ಸನ್ ಅವರು ಆಡಿರುವ ಒಂಬತ್ತು ಪಂದ್ಯಗಳಲ್ಲಿ 385 ರನ್ ಗಳಿಸಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರಕರ್ ನೇತೃತ್ವದಲ್ಲಿ ಮಂಗಳವಾರ ಹಂಗಾಮಿ ತಂಡವನ್ನು ಪ್ರಕಟಿಸಲಾಗಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ)ಗೆ ತಂಡದ ಪಟ್ಟಿ ಸಲ್ಲಿಸಲು ಇಂದು (ಬುಧವಾರ) ಕೊನೆಯ ದಿನವಾಗಿದೆ. ರೋಹಿತ್ ಶರ್ಮಾ ನಾಯಕ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಉತ್ತಮವಾಗಿ ಆಡಿರುವ ಆಲ್‌ರೌಂಡರ್ ಶಿವಂ ದುಬೆ, ಅಕ್ಷರ್ ಪಟೇಲ್ ಕೂಡ ಸ್ಥಾನ ಗಿಟ್ಟಿಸಿದ್ದಾರೆ. ಆದರೆ ಕನ್ನಡಿಗ ಕೆ.ಎಲ್. ರಾಹುಲ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ರಿಷಭ್ ಪಂತ್ ವಿಕೆಟ್‌ಕೀಪರ್ ಆಗಿದ್ದು, ಎರಡನೇ ವಿಕೆಟ್‌ಕೀಪರ್ ಆಗಿ ಸಂಜು ಸ್ಥಾನ ಗಳಿಸಿದ್ದಾರೆ. ಇಶಾನ್‌ ಕಿಶನ್ ಅವರನ್ನೂ ಆಯ್ಕೆಗೆ ಪರಿಗಣಿಸಿಲ್ಲ. ಭಾರತ ತಂಡವು ಜೂನ್ 5ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ಎದುರಿನ ಪಂದ್ಯದಲ್ಲಿ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್‌ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಆರ್ಷದೀಪ್ ಸಿಂಗ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಮೀಸಲು ಆಟಗಾರರು: ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹಮದ್, ಆವೇಶ್ ಖಾನ್. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.