ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಾತಿ, ಆರ್ಥಿಕ ಸಮೀಕ್ಷೆ: ರಾಹುಲ್ ಪಟಾನ್(ಗುಜರಾತ್): ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿ ಮತ್ತು ಆರ್ಥಿಕ ಸಮೀಕ್ಷೆ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಉತ್ತರ ಗುಜರಾತ್‌ನ ಪಟಾನ್ ಪಟ್ಟಣದಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಅವರು ಮಾತನಾಡಿದರು. ‘ದೇಶದಲ್ಲಿ ಶೇಕಡ 90ರಷ್ಟು ಎಸ್‌ಸಿ, ಎಸ್‌ಟಿ, ಒಬಿಸಿ ಜನಸಂಖ್ಯೆ ಇದೆ. ಆದರೆ, ಕಾರ್ಪೊರೇಟ್ ಕಂಪನಿಗಳು, ಮಾಧ್ಯಮ, ಖಾಸಗಿ ಆಸ್ಪತ್ರೆಗಳು ಮತ್ತು ಖಾಸಗಿ ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದ ಅಧಿಕಾರಿಗಳ ಮಟ್ಟದಲ್ಲಿ ಅವರ ಪ್ರಾತಿನಿಧ್ಯವನ್ನು ಕಾಣಲು ಸಿಗುತ್ತಿಲ್ಲ. ಅಧಿಕಾರಕ್ಕೆ ಬಂದ ಕೂಡಲೇ ನಾವು ಜಾತಿ ಮತ್ತು ಆರ್ಥಿಕ ಸಮೀಕ್ಷೆ ನಡೆಸುತ್ತೇವೆ’ ಎಂದು ಅವರು ಸ್ಪಷ್ಟಪಡಿಸಿದರು. ಆಡಳಿತಾರೂಢ ಬಿಜೆಪಿ ಮತ್ತು ಆರ್‌ಎಸ್ಎಸ್‌ ಸಂವಿಧಾನವನ್ನು ಬದಲಾಯಿಸಲು ಯತ್ನಿಸುತ್ತಿವೆ ಎಂದು ಅವರು ದೂರಿದರು. ದೇಶದಲ್ಲಿ ನಿರುದ್ಯೋಗ 45 ವರ್ಷಗಳಲ್ಲೇ ಅತ್ಯಧಿಕ ಮಟ್ಟಕ್ಕೆ ಏರಿದೆ ಎಂದೂ ಆರೋಪಿಸಿದರು. ಪಟಾನ್ ಲೋಕಸಬಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದನ್ ಜೀ ಠಾಕೂರ್ ಪರ ರಾಹುಲ್ ಗಾಂಧಿ ಪ್ರಚಾರ ನಡೆಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.