2ಜಿ ತರಂಗಾಂತರ ಹಂಚಿಕೆ ಪ್ರಕರಣ: ಮೋದಿ ಸರ್ಕಾರದ್ದು ಬೂಟಾಟಿಕೆ– ಕಾಂಗ್ರೆಸ್‌ ನವದೆಹಲಿ: 2ಜಿ ತರಂಗಾಂತರ ಹಂಚಿಕೆ ಪ್ರಕರಣದ ತೀರ್ಪಿನ ಪರಿಷ್ಕರಣೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಮೋದಿ ಸರ್ಕಾರದ ನಡೆಯ ಕುರಿತು ಕಾಂಗ್ರೆಸ್‌ ಪಕ್ಷ ಟೀಕಿಸಿದೆ. ‘ಮೋದಿ ಸರ್ಕಾರ ಮತ್ತು ಬಿಜೆಪಿಯ ಬೂಟಾಟಿಕೆಗೆ ಎಲ್ಲೆಯೇ ಇಲ್ಲ. ಮನಮೋಹನ್ ಸಿಂಗ್ ಸರ್ಕಾರವಿದ್ದಾಗ, ಆಡಳಿತಾತ್ಮಕ ಹಂಚಿಕೆಯನ್ನೇ ಹಗರಣ ಎಂದಿದ್ದರು. ಈಗ ಅದರ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಹರಾಜು ಇಲ್ಲದೆಯೇ ತರಂಗಾಂತರ ಹಂಚಿಕೆಗೆ ಅನುಮತಿ ನೀಡುವಂತೆ ಈಗ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್ ಪ್ರತಿಕ್ರಿಯಿಸಿದ್ದಾರೆ. ಪ್ರಾಕೃತಿಕ ಸಂಪನ್ಮೂಲಗಳ ವರ್ಗಾವಣೆ ವೇಳೆ ರಾಜ್ಯಗಳು ಹರಾಜು ಮಾಡುವ ಮಾರ್ಗ ಅನುಸರಿಸಬೇಕು ಎಂದು ಸುಪ್ರೀಂ ಕೋರ್ಟ್‌, ‘2ಜಿ ತರಂಗಾಂತರ ಹಂಚಿಕೆ’ ಪ್ರಕರಣದಲ್ಲಿ ತೀರ್ಪು ನೀಡಿತ್ತು. ಈ ತೀರ್ಪಿನ ಪರಿಷ್ಕರಣೆ ಕೋರಿ ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.