ಮಾಲೆಗಾಂವ್ ಸ್ಫೋಟ: ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಪ್ರಜ್ಞಾ ಠಾಕೂರ್ ಮುಂಬೈ: ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಪ್ರಜ್ಞಾ ಠಾಕೂರ್ ಅವರು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪದೇ ಪದೇ ಎಚ್ಚರಿಕೆ ನೀಡಿದರೂ ವಿಚಾರಣೆಗೆ ಪ್ರಜ್ಞಾ ಠಾಕೂರ್ ಹಾಜರಾಗಿರಲಿಲ್ಲ. ಅವರ ವಿರುದ್ಧ ವಾರೆಂಟ್‌ ಸಹ ಹೊರಡಿಸಲಾಗಿತ್ತು. ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಈ ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿದೆ ಎಂದು ಎನ್‌ಐಎ ಅಧಿಕಾರಿಗಳು ಹೇಳಿದ್ದಾರೆ. ಯುಎಪಿಎ ಅಡಿಯಲ್ಲಿ ಪ್ರಜ್ಞಾ ಠಾಕೂರ್‌ ಹಾಗೂ ಇತರೆ ಆರು ಮಂದಿ ಸ್ಫೋಟ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಎನ್‌ಐಎ ನ್ಯಾಯಾಲಯವು ಆರೋಪಿಗಳ ಹೇಳಿಕೆಗಳನ್ನು ಅಪರಾಧ ಪ್ರಕ್ರಿಯಾ ಸಂಹಿತೆಯಡಿ (ಸಿಆರ್‌ಪಿಸಿ) ದಾಖಲಿಸಿಕೊಳ್ಳುತ್ತಿದೆ. 2008ರ ಸೆಪ್ಟೆಂಬರ್ 29ರಂದು ನಾಸಿಕ್ ಜಿಲ್ಲೆಯ ಮಾಲೆಗಾಂವ್ ಪಟ್ಟಣದ ಮಸೀದಿಯೊಂದರ ಸಮೀಪ ಸ್ಫೋಟ ನಡೆದಿತ್ತು. ಈ ವೇಳೆ ಆರು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.