ಭೂಮಿ ಹಂಚಿಕೆ ಹಗರಣ: ಗುಜರಾತ್‌ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌ ನವದೆಹಲಿ: ಗುಜರಾತ್‌ನಲ್ಲಿ ನಡೆದಿದೆ ಎನ್ನಲಾದ ಭೂಮಿ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಿವೃತ್ತ ಐಎಎಸ್‌ ಅಧಿಕಾರಿ ಪ್ರದೀಪ್‌ ಶರ್ಮಾ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ಗುಜರಾತ್‌ ಸರ್ಕಾರವನ್ನು ಸೋಮವಾರ ಕೇಳಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್‌ ಎಸ್‌. ಓಕಾ ಮತ್ತು ಉಜ್ಜಲ್‌ ಭುಯಾನ್‌ ಅವರಿದ್ದ ಪೀಠವು, ಗುಜರಾತ್‌ ಸರ್ಕಾರಕ್ಕೆ ನೋಟಿಸ್‌ ನೀಡಿದೆ. ಕಛ್‌ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಆರ್ಥಿಕ ಲಾಭಕ್ಕಾಗಿ ಸರ್ಕಾರಿ ಜಮೀನನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪ ಪ್ರದೀಪ್‌ ಶರ್ಮಾ ಅವರ ಮೇಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಶರ್ಮಾ ಅವರು ಗುಜರಾತ್‌ ಹೈಕೋರ್ಟ್‌ಗೂ ಮನವಿ ಸಲ್ಲಿಸಿದ್ದರು. ಆದರೆ, ಗುಜರಾತ್‌ ಹೈಕೋರ್ಟ್‌ ಶರ್ಮಾ ಅವರ ಅರ್ಜಿಯನ್ನು ತಿರಸ್ಕರಿಸಿ, ಆದೇಶ ಹೊರಡಿಸಿತು. ಪ್ರಸ್ತುತ, ಶರ್ಮಾ ಅವರು ಗುಜರಾತ್‌ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನ ಮೊರೆಹೋಗಿದ್ದಾರೆ. ‘ಭೂಮಿ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಎಫ್‌ಐಆರ್‌ ದಾಖಲಿಸಬೇಕು’ ಎಂದೂ ಕೋರಿ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನವರಿ 31ರಂದು ಗುಜರಾತ್‌ ಹೈಕೋರ್ಟ್‌ ತಿರಸ್ಕರಿಸಿತ್ತು. ಇದನ್ನೂ ಶರ್ಮಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಈ ಅರ್ಜಿಗೆ ಸಂಬಂಧಿಸಿದಂತೆಯೂ ಸುಪ್ರೀಂ ಕೋರ್ಟ್‌ ಗುಜರಾತ್‌ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ. ಶರ್ಮಾ ಅವರ ಪರ ಹಿರಿಯ ವಕೀಲ ದೇವದತ್‌ ಕಾಮತ್‌ ಮತ್ತು ಗುಜರಾತ್‌ ಸರ್ಕಾರದ ಪರವಾಗಿ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ವಾದ ಮಂಡಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.