ಛತ್ತೀಸಗಢ | ಎನ್‌ಕೌಂಟರ್: ನಕ್ಸಲ್ ಹತ್ಯೆ ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ನಕ್ಸಲ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇಶಕುತುಲ್–ಕೇಶಮುಂಡಿ ಅರಣ್ಯಗಳಲ್ಲಿ ಮಾವೋವಾದಿಗಳ ಮುಖಂಡ ಕವಾಸಿ ಪಂಡಾರು ಹಾಗೂ 15–20 ನಕ್ಸಲರು ಬೀಡುಬಿಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ 5.30ರ ಸುಮಾರಿಗೆ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ತಂಡವು ಭೈರಂಗಢ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶಕುತುಲ್ ಗ್ರಾಮದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ಕೈಗೊಂಡಿತ್ತು. ಆಗ ನಕ್ಸಲರು ಮತ್ತು ಭದ್ರತಾ ಪಡೆಗಳ ಮಧ್ಯೆ ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಒಬ್ಬ ನಕ್ಸಲನ ಮೃತದೇಹ, ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಛತ್ತೀಸಗಢದ ಬಸ್ತರ್ ಪ್ರಾಂತ್ಯದಲ್ಲಿ ಈ ವರ್ಷದಲ್ಲಿ 80 ನಕ್ಸಲರನ್ನು ಹತ್ಯೆ ಮಾಡಿದಂತಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.