ಒಡಿಶಾದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು: 31 ಸ್ಥಳಗಳಲ್ಲಿ ಬೆಂಕಿ ಬರಿಪದ (ಒಡಿಶಾ): ಮಯೂರ್‌ಭಂಜ್ ಜಿಲ್ಲೆಯ ಸಿಮ್ಲಿಪಾಲ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಎಸ್‌ಟಿಆರ್) ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸಲು ಒಡಿಶಾ ಸರ್ಕಾರ ವಿಪತ್ತು ನಿರ್ವಹಣಾ ಕ್ಷಿಪ್ರ ಕಾರ್ಯ ಪಡೆ ಸಿಬ್ಬಂದಿಯನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಎಸ್‌ಟಿಆರ್‌ನ ಸುಮಾರು 31 ಸ್ಥಳಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಹಲವೆಡೆ ಕಾಡ್ಗಿಚ್ಚು ಘಟನೆಗಳು ವರದಿಯಾಗಿವೆ. ಶನಿವಾರ ಸುಮಾರು 13 ಕಡೆ ಬೆಂಕಿ ಕಾಣಿಸಿಕೊಂಡಿದ್ದು, ಭಾನುವಾರ ಇದರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬೆಂಕಿ ನಂದಿಸಲು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಒಡಿಶಾ ವಿಪತ್ತು ನಿರ್ವಹಣಾ ಕ್ಷಿಪ್ರ ಕಾರ್ಯ ಪಡೆ ತಂಡ ನಮಗೆ ಸಹಾಯ ಮಾಡುತ್ತಿದೆ ಎಂದು ಎಸ್‌ಟಿಆರ್‌ನ ಕ್ಷೇತ್ರ ನಿರ್ದೇಶಕ ಪ್ರಕಾಶ್ ಚಂದ್ ಗೋಗಿನೇನಿ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.