ರಾಹುಲ್ ಗಾಂಧಿಗೆ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ: ನಡ್ಡಾ ಟೀಕೆ ವಯನಾಡ್ (ಕೇರಳ): ವಯನಾಡ್‌ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ ಹೊಂದಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಹಾನಿಕಾರಕವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ. ವಯನಾಡ್‌ ಕ್ಷೇತ್ರದ ಸುಲ್ತಾನ್‌ ಬತ್ತೇರಿಯಲ್ಲಿ ಆಯೋಜಿಸಲಾಗಿದ್ದ ರೋಡ್‌ ಶೋನಲ್ಲಿ ಮಾತನಾಡಿದ ಅವರು, ‘ರಾಹುಲ್‌ ಗಾಂಧಿ ತುಷ್ಟೀಕರಣದ ರಾಜಕೀಯವನ್ನು ನಂಬುವುದರ ಜತೆಗೆ ವೋಟ್‌ ಬ್ಯಾಂಕ್‌ ರಾಜಕೀಯದಲ್ಲಿ ತೊಡಗಿದ್ದಾರೆ. ರಾಹುಲ್‌ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ ಹೊಂದಿದ್ದು, ಇದು ಭಾರತೀಯ ಪ್ರಜಾಪ್ರಭುತ್ವಕ್ಕೆ ಹಾನಿಕಾರಕವಾಗಿದೆ’ ಎಂದು ಹೇಳಿದ್ದಾರೆ. ಎಸ್‌ಡಿಪಿಐ, ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ್ತು ಸ್ಥಳೀಯಾಡಳಿತದಲ್ಲಿ ಸಿಪಿಐ (ಎಂ)ಗೆ ಬೆಂಬಲ ನೀಡುತ್ತಿದೆ. ಈ ಎರಡೂ ಪಕ್ಷಗಳು ದೇಶ ವಿರೋಧಿ ಶಕ್ತಿಗಳಿಗೆ ಸಹಕಾರ ನೀಡುತ್ತವೆ ಎಂದು ನಡ್ಡಾ ಆರೋಪಿಸಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್‌ ಮಾತನಾಡಿ, ರಾಹುಲ್‌ ಗಾಂಧಿ ಅವರು ದೇಶವನ್ನು ಒಡೆದು ಆಳುವ ನೀತಿ ಮತ್ತು ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.