ನಾಯ್ಡುಗೆ ಜಾಮೀನು: ಮೇ 7ರಂದು ಆಂಧ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನವದೆಹಲಿ: ಕೌಶಲ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಆಂಧ್ರ ಪ್ರದೇಶ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಮೇ 7ರಂದು ಸುಪ್ರೀಂ ಕೋರ್ಟ್‌ ನಡೆಸಲಿದೆ. ಆಂಧ್ರ ಸರ್ಕಾರದ ಪರ ವಕೀಲರು ಸಲ್ಲಿಸಿರುವ ಅರ್ಜಿಯನ್ನು (ಎಐ) ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್‌ ಮಿಥಲ್‌ ಅವರನ್ನು ಒಳಗೊಂಡ ಪೀಠವು ಮಂಗಳವಾರ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ, ‘ಅರ್ಜಿಯು ಈವರೆಗೆ ದಾಖಲಿಸಿಕೊಂಡ ಹೇಳಿಕೆ ಅಥವಾ ಸಾಕ್ಷ್ಯದ ಭಾಗವಾಗಿಲ್ಲ ಎಂದು ಕಂಡುಬರುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ನಂತರ ಈ ಅರ್ಜಿ ಮತ್ತು ರಜಾಕಾಲದ ವಿಶೇಷ ಅರ್ಜಿಯನ್ನು ಮೇ 7ರಂದು ವಿಚಾರಣೆ ನಡೆಸುವುದಾಗಿ ತಿಳಿಸಿತು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಕಳೆದ ವರ್ಷದ ನ.20ರಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ನ.28ರಂದು ಕೋರ್ಟ್ ನಾಯ್ಡು ಅವರ ಪ್ರತಿಕ್ರಿಯೆ ಕೇಳಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.