ಚುನಾವಣಾ ಬಾಂಡ್‌ ರದ್ದತಿ: ಸುಪ್ರೀಂ ಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದು ಮಾಡಿರುವ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಚುನಾವಣಾ ಬಾಂಡ್‌ ಯೋಜನೆಯನ್ನು ಅಸಾಂವಿಧಾನಿಕ ಎಂದು ಹೇಳಿದ್ದ ಸುಪ್ರೀಂಕೋರ್ಟ್‌ ಕಳೆದ ಫೆ.15ರಂದು ರದ್ದು ಮಾಡಿತ್ತು. ವಕೀಲ ಮ್ಯಾಥೀವ್‌ ಜೆ.ನೇದುಂಪರಾ ಅವರು ತೀರ್ಪು ಮರುಪರಿಶೀಲಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ‘ಯೋಜನೆ ವಿರುದ್ಧದ ಅರ್ಜಿಯನ್ನು ಪುರಸ್ಕರಿಸಿ ಯೋಜನೆ ರದ್ದು ಮಾಡುವ ಮೂಲಕ ತಾನು ಸಂಸತ್ತಿಗೆ ಪರ್ಯಾಯವಾಗಿ ಸಕ್ಷಮ ಪ್ರಾಧಿಕಾರದಂತೆ ಕಾರ್ಯನಿರ್ವಹಿಸುತ್ತಿದ್ದೇನೆ ಎಂಬುದನ್ನು ಸುಪ್ರೀಂ ಕೋರ್ಟ್ ಮರೆತಂತಿದೆ. ಈ ವಿಷಯವು ಸಂಪೂರ್ಣವಾಗಿ ಶಾಸನಸಭೆಯ ವ್ಯಾಪ್ತಿಗೆ ಒಳಪಟ್ಟಿದೆ’ ಎಂದು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ. ಈ ವಿಷಯವು ವಿಚಾರಣೆಗೆ ಅರ್ಹವಾಗಿದೆಯೇ ಎಂಬುದನ್ನು ಗುರುತಿಸುವಲ್ಲಿಯೂ ಕೋರ್ಟ್‌ ವಿಫಲವಾಗಿದೆ ಎಂದೂ ಹೇಳಿದ್ದಾರೆ. 2018ರಲ್ಲಿ ಜಾರಿಗೆ ತಂದಿದ್ದ ಈ ಯೋಜನೆಯು ಸಂವಿಧಾನ ದತ್ತವಾದ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂದು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠ ಅಭಿಪ್ರಾಯ ಪಟ್ಟು, ಇದನ್ನು ರದ್ದು ಮಾಡಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.