ಸಲ್ಮಾನ್‌ ಖಾನ್ ಮನೆಯ ಹೊರಗೆ ಗುಂಡಿನ ಸದ್ದು: ನಟನ ಜತೆ ಸಿಎಂ ಶಿಂದೆ ಮಾತುಕತೆ ಮುಂಬೈ: ನಟ ಸಲ್ಮಾನ್‌ ಖಾನ್‌ ನಿವಾಸದ ಎದುರು ಆಗಂತುಕರಿಬ್ಬರು ಗುಂಡು ಹಾರಿಸಿದ ಹಿನ್ನೆಲೆ ನಟನ ಜತೆ ಮುಖ್ಯಮಂತ್ರಿ ಏಕನಾಥ ಶಿಂದೆ ಮಾತುಕತೆ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರತೆ ಸಂಬಂಧ ನಟ ಸಲ್ಮಾನ್‌ ಖಾನ್‌ ಜತೆ ಮಾತನಾಡಿದ್ದೇನೆ. ಅವರಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದರು. ಮುಂಬೈ ಪೊಲೀಸ್‌ ಕಮಿಷನರ್‌ ಅವರೊಂದಿಗೂ ಭದ್ರತೆ ಸಂಬಂಧ ಚರ್ಚಿಸಿದ್ದೇನೆ. ಗುಂಡಿನ ದಾಳಿಯು ಅತ್ಯಂತ ದುರದೃಷ್ಟಕರ ಸಂಗತಿ. ಆದರೆ ಕಾನೂನನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನು ಉಲ್ಲಂಘಿಸಿದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ‘ ಎಂದರು. ಎರಡು ಬೈಕ್‌ಗಳಲ್ಲಿ ಬಂದ ಇಬ್ಬರು ಆರೋಪಿಗಳು ಇಂದು( ಭಾನುವಾರ) ಮುಂಜಾನೆ 5 ಗಂಟೆ ವೇಳೆಗೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಎದುರು ನಾಲ್ಕು ಸುತ್ತು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು. ಖಾನ್‌ ನಿವಾಸದ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಲಾಗಿದೆ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.