ಲೋಕಸಭಾ ಚುನಾವಣೆ: ನಾಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ನವದೆಹಲಿ: ಬಿಜೆಪಿಯು ಲೋಕಸಭಾ ಚುನಾವಣೆಗೆ ಸಿದ್ಧಪಡಿಸಿರುವ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಭಾನುವಾರ ಬಿಡುಗಡೆ ಮಾಡಲಿದೆ. ‘ವಿಕಸಿತ ಭಾರತ’ದ ನೀಲನಕ್ಷೆಗೆ ಪ್ರಣಾಳಿಕೆಯಲ್ಲಿ ಆದ್ಯತೆ ಲಭಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಒಳಗೊಂಡಂತೆ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ಸರ್ಕಾರವು ಅಯೋಧ್ಯೆ ರಾಮಮಂದಿರ ನಿರ್ಮಾಣ ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸುವುದು ಸೇರಿದಂತೆ ತನ್ನ ಪ್ರಮುಖ ಸೈದ್ಧಾಂತಿಕ ಭರವಸೆಗಳನ್ನು ಈಡೇರಿಸಿರುವುದರಿಂದ, ಈ ಬಾರಿಯ ಪ್ರಣಾಳಿಕೆಯಲ್ಲಿ ಸಂಸ್ಕೃತಿ ಮತ್ತು ಹಿಂದುತ್ವಕ್ಕೆ ಸಂಬಂಧಿಸಿದ ಯಾವೆಲ್ಲಾ ಕಾರ್ಯಸೂಚಿಗಳು ಇರಲಿವೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಯುವಕರು, ಮಹಿಳೆಯರು, ರೈತರು ಮತ್ತು ಬಡವರಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಭರವಸೆಯೂ ಪ್ರಣಾಳಿಕೆಯಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಬಿಜೆಪಿಯು ಪ್ರಣಾಳಿಕೆ ಸಿದ್ಧಪಡಿಸಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದ ಸಮಿತಿಯನ್ನು ನೇಮಕ ಮಾಡಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.