ಲೋಕಸಭಾ ಚುನಾವಣೆ| ಕಂಗನಾ ರನೌತ್‌ ವಿರುದ್ಧ ವಿಕ್ರಮಾದಿತ್ಯ ಸಿಂಗ್‌ ಕಣಕ್ಕೆ ನವದೆಹಲಿ: ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಶನಿವಾರ 16 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೇಂದ್ರದ ಮಾಜಿ ಸಚಿವ ಮನೀಷ್‌ ತಿವಾರಿ ಅವರನ್ನು ಚಂಡೀಗಢ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಟಿಕೆಟ್ಅನ್ನು ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್‌ ಅವರಿಗೆ ನೀಡಿದೆ. ವಿಕ್ರಮಾದಿತ್ಯ ಅವರು ಬಿಜೆಪಿಯ ಕಂಗನಾ ರನೌತ್‌ ವಿರುದ್ಧ ಪೈಪೋಟಿ ನಡೆಸಲಿದ್ದಾರೆ. ವಿಕ್ರಮಾದಿತ್ಯ ಅವರು ಹಿಮಾಚಲ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷೆ ಪ್ರತಿಭಾ ಸಿಂಗ್‌ ಅವರ ಪುತ್ರ. ಕಾಂಗ್ರೆಸ್‌ ಇದರೊಂದಿಗೆ ಒಟ್ಟು 259 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ. ಶನಿವಾರ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ (ಸಿಇಸಿ) ಹಿಮಾಚಲ ಪ್ರದೇಶ, ಹರಿಯಾಣ, ಪಂಜಾಬ್‌ ಮತ್ತು ದೆಹಲಿಯ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕಿ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಂಡರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.