ಮುನಿಸಿಪಲ್ ಚುನಾವಣೆ: ನಿರ್ಬಂಧ ಇಲ್ಲ- ದೆಹಲಿ ಹೈಕೋರ್ಟ್ ನವದೆಹಲಿ: ರಾಜ್ಯ ಚುನಾವಣಾ ಆಯೋಗದಿಂದ ಮಾನ್ಯತೆ ‍‍ಪಡೆದಿರುವ ರಾಜಕೀಯ ಪಕ್ಷಗಳು ಮುನಿಸಿಪಲ್ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ನಿರ್ಬಂಧ ಸಂವಿಧಾನದಲ್ಲಿ ಇಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ರಾಜ್ಯ ಚುನಾವಣಾ ಆಯೋಗವು (ಎಸ್‌ಇಸಿ) ರಾಜಕೀಯ ಪಕ್ಷಗಳಿಗೆ ಮುನಿಸಿಪಲ್ ಚುನಾವಣೆಯಲ್ಲಿ ಬಳಸಲು ಚಿಹ್ನೆಗಳನ್ನು ನೀಡುವುದು ತರ್ಕಬದ್ಧವಾಗಿಯೇ ಇದೆ ಎಂದು ಕೂಡ ಕೋರ್ಟ್ ಹೇಳಿದೆ. ಕಣಕ್ಕೆ ಇಳಿಯುವ ಅಭ್ಯರ್ಥಿಗಳಿಗೆ ರಾಜಕೀಯ ಪಕ್ಷಗಳ ಚಿಹ್ನೆ ನೀಡುವುದನ್ನು ಸ್ಥಗಿತಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಬೇಕು ಎಂದು ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ. ಅರ್ಜಿಯನ್ನು ತಿರಸ್ಕರಿಸಿದೆ. ‘ರಾಜ್ಯ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಮುನಿಸಿಪಲ್ ಚುನಾವಣೆಯಲ್ಲಿ ಸ್ಪರ್ಧಿಸಲು ನೀಡಿರುವ ಮಾನ್ಯತೆಯು, ಆಯೋಗದ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದೇನೂ ಅಲ್ಲ. ರಾಜಕೀಯ ಪಕ್ಷಗಳು ಮುನಿಸಿಪಲ್ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿರ್ಬಂಧವೇನೂ ಇಲ್ಲ’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನಮೀತ್ ಪಿ.ಎಸ್. ಅರೋರ ಅವರು ಇದ್ದ ವಿಭಾಗೀಯ ಪೀಠವು ಸ್ಪಷ್ಟಪಡಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.