ಕಣ್ಣೂರು ಸ್ಫೋಟ | ಪ್ರಕರಣ ಕುರಿತು ಕೇಂದ್ರೀಯ ಸಂಸ್ಥೆ ತನಿಖೆಗೆ ಕಾಂಗ್ರೆಸ್‌ ಆಗ್ರಹ ಕಣ್ಣೂರು (ಕೇರಳ): ಕಣ್ಣೂರು ಜಿಲ್ಲೆಯ ಪಾನೂರು ಬಳಿ ಇತ್ತೀಚೆಗೆ ಸಂಭವಿಸಿದ್ದ ಸ್ಫೋಟದ ಕುರಿತು ಕೇಂದ್ರ ತನಿಖಾ ಸಂಸ್ಥೆಗಳಿಂದ ತನಿಖೆ ನಡೆಸಬೇಕು ಎಂದು ಕೇರಳ ಕಾಂಗ್ರೆಸ್‌ ಆಗ್ರಹಿಸಿದೆ. ಘಟನೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಮೂವರು ಮಂದಿಗೆ ಗಾಯವಾಗಿದೆ. ಪ್ರಕರಣದ ಸಾಕ್ಷ್ಯಗಳನ್ನು ರಕ್ಷಿಸುವ ದೃಷ್ಟಿಯಿಂದ ರಾಜ್ಯದ ಪೊಲೀಸರನ್ನು ನಂಬಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಆರೋಪಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ರಾಹುಲ್‌ ಮಾಂಕೂಟ್ಟತ್ತಿಲ್, ‘ಬಾಂಬ್‌ ತಯಾರಿಕೆಯು ಗಂಭೀರ ಸಮಸ್ಯೆಯಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಪೊಲೀಸರು ಸಾಕ್ಷ್ಯಗಳನ್ನು ನಾಶಪಡಿಸದಂತೆ ನೋಡಿಕೊಳ್ಳಲು ಕೇಂದ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವ ಅಗತ್ಯವಿದೆ’ ಎಂದು ಹೇಳಿದ್ದಾರೆ. ಘಟನೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಮುಸ್ಲಿಂ ಯೂತ್‌ ಲೀಗ್‌ನ ಕೇರಳ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ.ಕೆ ಫಿರೋಸ್‌, ‘ಪೊಲೀಸರು ಪ್ರಕರಣದ ವಿವರಗಳನ್ನು ಹಾಗೂ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ಸ್ಥಿತಿಯನ್ನು ಮರೆಮಾಚುತ್ತಿದ್ದಾರೆ. ಹೀಗಾಗಿ ಪೊಲೀಸರು ಸೂಕ್ತ ತನಿಖೆ ನಡೆಸದಿರುವ ಆತಂಕವಿದೆ ಎಂದು ಆರೋಪಿಸಿದ್ದಾರೆ. ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.