ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಆರ್‌ಎಸ್‌ ದೂರು ಹೈದರಾಬಾದ್: ಲೋಕಸಭೆ ಚುನಾವಣೆ ಹಿನ್ನೆಲೆ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆ ಆರೋಪದಡಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ವಿರುದ್ಧ ಬಿಆರ್‌ಎಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಲೋಕಸಭಾ ಚುನಾವಣಾ ಪ್ರಚಾರದಿಂದ ರೇವಂತ್ ರೆಡ್ಡಿ ಅವರನ್ನು ತಕ್ಷಣವೇ ನಿಷೇಧಿಸಬೇಕು. ಎಂಸಿಸಿ ಉಲ್ಲಂಘನೆ ಆರೋಪದದಡಿ ಅವರ ಹಾಗೂ ಕಾಂಗ್ರೆಸ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಆರ್‌ಎಸ್ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಏಪ್ರಿಲ್ 6ರಂದು ನಗರದ ಹೊರವಲಯದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಸಿಎಂ ರೇವಂತ್ ರೆಡ್ಡಿ ಅವರು ಮಾಡಿದ ಭಾಷಣವನ್ನು ಉಲ್ಲೇಖಿಸಿ, ಬಿಆರ್‌ಎಸ್ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿದ್ದಾರೆಂದು ಬಿಆರ್‌ಎಸ್‌ ಪಕ್ಷ ಆರೋಪಿಸಿದೆ. ಬಿಆರ್‌ಎಸ್‌ನ ಪ್ರಮುಖರ ನಾಯಕರ ತಿರುಚಿದ ಚಿತ್ರಗಳನ್ನು ಬಿಜೆಪಿ ತನ್ನ ಸಾಮಾಜಿಕ ಜಾಲತಾಣ ‘ಎಕ್ಸ್‌‘ನಲ್ಲಿ ಹಂಚಿಕೊಂಡಿದೆ. ಹೀಗಾಗಿ ಬಿಜೆಪಿ ಪಕ್ಷದ ‘ಎಕ್ಸ್‌‘ ಖಾತೆಯನ್ನು ಪ್ರಚಾರ ಕ್ರಮದಿಂದ ತಕ್ಷಣವೇ ನಿಷೇಧಿಸುವಂತೆ ಬಿಆರ್‌ಎಸ್‌ ಪಕ್ಷ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.