ರಾಹುಲ್‌ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣದ ವಿಚಾರಣೆ ಮುಂದಕ್ಕೆ ಸುಲ್ತಾನ್‌ಪುರ (ಉತ್ತರ ಪ್ರದೇಶ): ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ 2018ರಲ್ಲಿ ದಾಖಲಾಗಿದ್ದ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಇಲ್ಲಿನ ವಿಶೇಷ ನ್ಯಾಯಾಲಯ ಏ.22ಕ್ಕೆ ಮುಂದೂಡಿದೆ. ರಾಹುಲ್‌ ಗಾಂಧಿ ಅವರು 2018ರ ಮೇನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ದೂರು ದಾಖಲಿಸಿದ್ದರು. ‘ರಾಹುಲ್‌ ಗಾಂಧಿ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಬೇಕು’ ಎಂದು ಮಿಶ್ರಾ ಪರ ವಕೀಲರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶರು ರಜೆಯಲ್ಲಿ ಇರುವ ಕಾರಣ ವಿಚಾರಣೆಯನ್ನು ಮುಂದೂಡಲಾಗಿದೆ. ‘ಪ್ರಾಮಾಣಿಕ ಮತ್ತು ಸ್ವಚ್ಛ ರಾಜಕಾರಣ ಮಾಡುವುದಾಗಿ ಬಿಜೆಪಿ ಹೇಳಿಕೊಳ್ಳುತ್ತದೆ. ಆದರೆ ಪಕ್ಷದ ಅಧ್ಯಕ್ಷರು ಕೊಲೆ ಪ್ರಕರಣದ ಆರೋಪಿ’ ಎಂದು ರಾಹುಲ್‌ ಗಾಂಧಿ ಹೇಳಿದ್ದರು. ಆ ಸಂದರ್ಭದಲ್ಲಿ ಅಮಿತ್ ಶಾ ಬಿಜೆಪಿ ಅಧ್ಯಕ್ಷರಾಗಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.