ಬೆಂಗಳೂರು: ಕೊಚ್ಚಿಗೆ ಹೊರಟಿದ್ದ ವಿಮಾನದಲ್ಲಿ ಬೆಂಕಿ, ತುರ್ತು ಭೂಸ್ಪರ್ಶ ಬೆಂಗಳೂರು: ಬೆಂಗಳೂರಿನಿಂದ ಕೊಚ್ಚಿ ಕಡೆ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ತುರ್ತು ಲ್ಯಾಂಡಿಂಗ್ ಮಾಡಿದೆ. ತುರ್ತು ಭೂಸ್ಪರ್ಶದ ಬಳಿಕ ಕೆಲವೇ ನಿಮಿಷಗಳಲ್ಲಿ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಇಳಿಸಲಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಿಳಿಸಿದೆ. ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಕೂಡಲೇ, ವಿಮಾನದ ಸಿಬ್ಬಂದಿ ಏರ್ ಟ್ರಾಫಿಕ್ ಕಂಟ್ರೋಲರ್‌ಗೆ ಮಾಹಿತಿ ನೀಡಿದ್ದು, ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ಬಳಿಕ ಬೆಂಕಿ ನಂದಿಸಲಾಗಿದೆ. '2024ರ ಮೇ 18ರಂದು, ಬೆಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ 1132 ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾತ್ರಿ 11.12ರ ಸುಮಾರಿಗೆ ತುರ್ತು ಲ್ಯಾಂಡಿಂಗ್ ಮಾಡಿತು’ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. . ‘ಆ ಸಂದರ್ಭ ಪೂರ್ಣ ಪ್ರಮಾಣದ ತುರ್ತು ಪರಿಸ್ಥಿತಿಯನ್ನು ಘೋಷಿಸಿ, ಲ್ಯಾಂಡಿಂಗ್ ಆದ ತಕ್ಷಣ ಬೆಂಕಿಯನ್ನು ನಂದಿಸಲಾಯಿತು. ಎಲ್ಲ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಗಿದೆ ಎಂದು’ವಕ್ತಾರರು ತಿಳಿಸಿದ್ದಾರೆ. ಟೇಕಾಫ್ ಆದ ನಂತರ ಬಲಬದಿಯ ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡ ಶಂಕೆಯಿಂದಾಗಿ ಬೆಂಗಳೂರು-ಕೊಚ್ಚಿ ವಿಮಾನವು ನಿಲ್ದಾಣಕ್ಕೆ ಹಿಂದಿರುಗಿತು. ಮುನ್ನೆಚ್ಚರಿಕೆ ಕ್ರಮವಾಗಿ ಲ್ಯಾಂಡಿಂಗ್ ಮಾಡಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ತಿಳಿಸಿದ್ದಾರೆ. ಬೆಂಕಿಗೆ ಕಾರಣ ಪತ್ತೆಗೆ ಸಂಪೂರ್ಣ ತನಿಖೆ ನಡೆಸಲಾಗುತ್ತದೆ ಎಂದೂ ಅವರು ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.