ಕವಿತಾ ಜಾಮೀನು ಅರ್ಜಿ: ಸಿಬಿಐ ನಿಲುವು ಸ್ಪಷ್ಟಪಡಿಸಲು ಹೈಕೋರ್ಟ್‌ ಸೂಚನೆ ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಲ್ಲಿ ಜಾಮೀನು ನೀಡುವಂತೆ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಸಲ್ಲಿಸಿರುವ ಅರ್ಜಿ ಕುರಿತು ನಿಲುವು ತಿಳಿಸುವಂತೆ ದೆಹಲಿ ಹೈಕೋರ್ಟ್‌ ಸಿಬಿಐಗೆ ಗುರುವಾರ ಸೂಚಿಸಿದೆ. ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೂಡ ಕವಿತಾ ಅವರು ಜಾಮೀನು ಕೋರಿದ್ದಾರೆ. ಈ ಎರಡೂ ಅರ್ಜಿಗಳ ವಿಚಾರಣೆಯನ್ನು ಮೇ 24ರಂದು ನಡೆಸಲು ಹೈಕೋರ್ಟ್‌ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡುವ ಕುರಿತು ಅಭಿಪ್ರಾಯ ತಿಳಿಸುವಂತೆ ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮ ಅವರು ಸಿಬಿಐಗೆ ನೋಟಿಸ್‌ ನೀಡಿದ್ದಾರೆ. ಸಿಬಿಐ ವಶದಲ್ಲೇ ಅವರ ವಿಚಾರಣೆ ನಡೆಸಲು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನೂ ಪ್ರಶ್ನಿಸಿ ಕವಿತಾ ಅವರು ಅರ್ಜಿ ಸಲ್ಲಿಸಿದ್ದರು. ಆ ಕುರಿತೂ ಅಭಿಪ್ರಾಯ ತಿಳಿಸುವಂತೆ ಸಿಬಿಐಗೆ ಹೈಕೋರ್ಟ್‌ ಹೇಳಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಸಿಬಿಐ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ಕವಿತಾ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.