ಮಹಾರಾಷ್ಟ್ರ: ದೇವಸ್ಥಾನದ ಪ್ರಸಾದ ಸೇವಿಸಿ 90 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು ಮುಂಬೈ: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ದೇವಸ್ಥಾನದ ಉತ್ಸವ ಸಂದರ್ಭದಲ್ಲಿ ಪ್ರಸಾದ ಸೇವಿಸಿದ ಕನಿಷ್ಠ 90 ಮಂದಿ ಅಸ್ವಸ್ಥಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಾಯ್‌ಗಾಂವ್‌ನಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶಿವ ದೇಗುಲದಲ್ಲಿ ಉತ್ಸವವೊಂದನ್ನು ಆಯೋಜಿಸಲಾಗಿತ್ತು. ಬಳಿಕ ಭಕ್ತರಿಗೆ 'ಅಂಬಿಲ್' (ಗಂಜಿ) ಮತ್ತು 'ಖೀರ್' (ಹಾಲಿನಿಂದ ಮಾಡಿದ ಸಿಹಿ ಭಕ್ಷ್ಯ) ನೀಡಲಾಗಿತ್ತು. ಪ್ರಸಾದ ಸೇವಿಸಿದ ಬಳಿಕ ಕೆಲ ಭಕ್ತರಿಗೆ ತಲೆಸುತ್ತು ಹಾಗೂ ವಾಂತಿ ಸಮಸ್ಯೆ ಕಾಣಿಸಿಕೊಂಡಿತು. ಆರಂಭದಲ್ಲಿ ಕೆಲವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಬಳಿಕ ತಡರಾತ್ರಿಯವರೆಗೆ ಒಟ್ಟು 90 ಜನರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸದ್ಯ ಎಲ್ಲರ ಆರೋಗ್ಯ ಸ್ಥಿರವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.