ಕಾಳ್ಗಿಚ್ಚು | ಖುದ್ದು ಹಾಜರಾಗಿ: ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ ನವದೆಹಲಿ: ‘ಉತ್ತರಾಖಂಡದ ಅರಣ್ಯ ಪ್ರದೇಶಗಳಲ್ಲಿ ವ್ಯಾಪಿಸಿರುವ ಕಾಳ್ಗಿಚ್ಚು ನಿಯಂತ್ರಿಸಲು ರಾಜ್ಯ ಸರ್ಕಾರದ ಕ್ರಮವು ತೀರಾ ನೀರಸವಾಗಿರುವುದು ನೋವುಂಟು ಮಾಡಿದೆ’ ಎಂದು ಉತ್ತರಾಖಂಡ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ. ರಾಜ್ಯದ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಕಾಳ್ಗಿಚ್ಚು ಕುರಿತು ಸಲ್ಲಿಕೆಯಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠವು, ಮೇ 17ರಂದು ನಡೆಯಲಿರುವ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಬೇಕು ಎಂದು ಉತ್ತರಾಖಂಡದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿತು. ಕಾಳ್ಗಿಚ್ಚು ನಂದಿಸಲು ಹಲವು ಕಾರ್ಯ ಯೋಜನೆಗಳು ಸಿದ್ಧವಾಗಿವೆಯಾದರೂ, ಅವುಗಳ ಜಾರಿಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯದ ಅರಣ್ಯ ಇಲಾಖೆಯಲ್ಲಿ ಭರ್ತಿಯಾಗದೆ ಖಾಲಿ ಇರುವ ಹಲವು ಹುದ್ದೆಗಳ ಬಗ್ಗೆ ಪ್ರಸ್ತಾಪಿಸಿದ ಪೀಠವು, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.