ಮೋದಿ ವಿರುದ್ಧ ಕ್ರಮ: ಆಯೋಗಕ್ಕೆ ನಿರ್ದೇಶಿಸಲು ಕೋರಿದ್ದ ಅರ್ಜಿ ವಜಾ ನವದೆಹಲಿ: ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವ ಹೇಳಿಕೆಗಳ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಕೋರಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾ ಮಾಡಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ದತ್ತಾ, ‘ಅರ್ಜಿಯು ತಪ್ಪಾಗಿ ಅರ್ಥೈಸಿಕೊಂಡಿದ್ದಾಗಿದೆ ಮತ್ತು ನಂಬಲರ್ಹವಲ್ಲದ ಅಂಶಗಳಿಂದ ಕೂಡಿದೆ. ಅರ್ಜಿದಾರನ ದೂರಿನ ಕುರಿತು ಕಾನೂನಿನ ಪ್ರಕಾರ ಭಾರತದ ಚುನಾವಣಾ ಆಯೋಗವು ಸ್ವತಂತ್ರವಾಗಿ ಕ್ರಮ ಕೈಗೊಳ್ಳಬಹುದು’ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮ ಮತ್ತು ದೇವರ ಹೆಸರಿನಲ್ಲಿ ಮತ ಕೇಳಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ನೀಡಿದ ಆದೇಶವನ್ನು ಕೋರ್ಟ್ ಮತ್ತೆ ಉಲ್ಲೇಖಿಸಿತು. ಎಲ್ಲ ರಾಜಕೀಯ ಪಕ್ಷಗಳಿಗೆ ವಿಸ್ತೃತ ಸಲಹೆಗಳನ್ನು ನೀಡಲಾಗಿದೆ. ಅಗತ್ಯವಿದ್ದರೆ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ಚುನಾವಣಾ ಆಯೋಗದ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.