ಬಂಗಾಳದ ಮಹಿಳೆಯರ ಘನತೆ, ಆತ್ಮಗೌರವದೊಂದಿಗೆ ಆಟವಾಡಬೇಡಿ: ಮೋದಿಗೆ ಮಮತಾ ಎಚ್ಚರಿಕೆ ಬೊಂಗಾಂವ್ (ಪಶ್ಚಿಮ ಬಂಗಾಳ): ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಪಶ್ಚಿಮ ಬಂಗಾಳದ ಮಹಿಳೆಯರ ಆತ್ಮಗೌರವ ಮತ್ತು ಘನತೆಯೊಂದಿಗೆ ಆಟವಾಡಬೇಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಬೊಂಗಾಂವ್‌ನಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಶ್ಚಿಮ ಬಂಗಾಳದ ಪರಿಸ್ಥಿತಿ ಬಿಜೆಪಿ ಆಡಳಿತ ನಡೆಸುತ್ತಿರುವ ಇತರ ರಾಜ್ಯಗಳಂತಿಲ್ಲ ಎಂಬುದನ್ನು ಮೋದಿ ಅವರು ನೆನಪಿನಲ್ಲಿಟ್ಟುಕೊಳ್ಳಬೇಕು’ ಎಂದು ಹೇಳಿದರು. ‘ನಮ್ಮ ತಾಯಂದಿರು ಮತ್ತು ಸಹೋದರಿಯರ ಆತ್ಮ ಗೌರವದೊಂದಿಗೆ ಆಟವಾಡುವ ಮೂಲಕ ರಾಜಕೀಯ ಪಿತೂರಿ ನಡೆಸಬೇಡಿ. ನಮ್ಮ ಮಹಿಳೆಯರನ್ನು ಮುಟ್ಟಬೇಡಿ. ಇದು ನಿಮ್ಮ ಉತ್ತರ ಪ್ರದೇಶ, ಮಧ್ಯಪ್ರದೇಶ ರಾಜ್ಯಗಳಲ್ಲ. ಬಂಗಾಳದಲ್ಲಿನ ಮಹಿಳೆಯರು ಗೌರವ ಮತ್ತು ಘನತೆಯೊಂದಿಗೆ ಬದುಕುತ್ತಿದ್ದಾರೆ’ ಎಂದು ತಿಳಿಸಿದರು. ಸಂದೇಶ್‌ಖಾಲಿ ಪ್ರಕರಣದ ಸಂತ್ರಸ್ತೆಯರಿಗೆ ಟಿಎಂಸಿ ನಾಯಕರು ಬೆದರಿಕೆಯೊಡ್ಡುತ್ತಿದ್ದಾರೆ. ಅಪರಾಧಿಗಳನ್ನು ರಕ್ಷಿಸಲು ತೃಣಮೂಲ ಕಾಂಗ್ರೆಸ್‌ ಪಕ್ಷ (ಟಿಎಂಸಿ) ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಆರೋಪಿಸಿದ್ದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಸುಮಾರು 300 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.