ಕೇರಳ: ಕೆ.ಸುಧಾಕರನ್‌ಗೆ ಮತ್ತೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ತಿರುವನಂತಪುರ: ಪಕ್ಷದ ಒಂದು ವಿಭಾಗದ ಮುಖಂಡರ ತೀವ್ರ ಆಕ್ಷೇಪದ ನಡುವೆಯೇ ಕೆ.ಸುಧಾಕರನ್ ಅವರು ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು. ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಸುಧಾಕರನ್‌ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಕೆಪಿಸಿಸಿ ಹಂಗಾಮಿ ಅಧ್ಯಕ್ಷ ಎಂ.ಎಂ.ಹಸನ್ ಸೇರಿದಂತೆ ಪ್ರಮುಖ ಮುಖಂಡರು ಕಾರ್ಯಕ್ರಮಕ್ಕೆ ಗೈರಾಗಿದ್ದರು. ಅಧಿಕಾರ ಸ್ವೀಕರಿಸುವುದಕ್ಕೂ ಮೊದಲು ಸುಧಾಕರನ್‌ ಅವರು ಹಿರಿಯ ಮುಖಂಡ ಎ.ಕೆ.ಆ್ಯಂಟನಿ ಅವರ ಅವರನ್ನು ಭೇಟಿಯಾಗಿದ್ದರು. ಕಣ್ಣೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುಧಾಕರನ್‌ ಅವರು ಎಐಸಿಸಿ ನಿರ್ದೇಶನದಂತೆ ತಾತ್ಕಾಲಿಕವಾಗಿ ಅಧ್ಯಕ್ಷ ಸ್ಥಾನವನ್ನು ಹಸನ್‌ ಅವರಿಗೆ ಹಸ್ತಾಂತರಿಸಿದ್ದರು. ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದ ಕಾರಣ ಕೆಪಿಸಿಸಿ ಅಧ್ಯಕ್ಷರಾಗಿ ಮತ್ತೆ ಅಧಿಕಾರ ಸ್ವೀಕರಿಸಲು ಚುನಾವಣಾ ಫಲಿತಾಂಶ ಬರುವವರೆಗೆ ಕಾಯುವಂತೆ ಸುಧಾಕರನ್‌ ಅವರಿಗೆ ವರಿಷ್ಠರು ಸೂಚಿಸಿದ್ದರು ಎಂದು ವರದಿಯಾಗಿತ್ತು. ಇದನ್ನು ನಿರಾಕರಿಸಿರುವ ಪಕ್ಷದ ವರಿಷ್ಠರು, ಹಸನ್‌ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿಯಷ್ಟೇ ನೇಮಿಸಲಾಗಿತ್ತು ಎಂದಿದ್ದರು. ‘ಎಐಸಿಸಿ ಸೂಚನೆಯಂತೆ ಅಧಿಕಾರ ಸ್ವೀಕರಿಸಿದ್ದೇನೆ’ ಎಂದು ಸುಧಾಕರನ್‌ ಅವರು ಸುದ್ದಿಗಾರರಿಗೆ ತಿಳಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.