2019ರ ಭಾಷಣವನ್ನೇ ಮೋದಿ 2024ರಲ್ಲಿ ಓದುತ್ತಿದ್ದಾರೆ: ಸುಪ್ರಿಯಾ ಶ್ರೀನೇತ್‌ ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿಯವರು 2019ರಲ್ಲಿ ಬರೆದ ಭಾಷಣವನ್ನೇ 2024ರಲ್ಲಿ ಓದುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತ್ ವ್ಯಂಗ್ಯವಾಡಿದ್ದಾರೆ. ಅಲ್ಲದೆ ಮುಸ್ಲಿಂ ಮೀಸಲಾತಿ ಸಂಬಂಧ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ‘ಮುಸ್ಲಿಮರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ಗುಜಾರಾತ್‌ ಹಾಗೂ ಮಧ್ಯಪ್ರದೇಶದಲ್ಲಿ ನಾವು ಮೀಸಲಾತಿ ನೀಡಿದ್ದೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ 2022ರಲ್ಲಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ ಎಂದು ಸುಪ್ರಿಯಾ ತಿಳಿಸಿದ್ದಾರೆ. ‘10 ವರ್ಷ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಬಳಿಕ, ತಮ್ಮ ರಿಪೋರ್ಟ್‌ ಕಾರ್ಡ್‌ ಹಾಗೂ ಸರ್ಕಾರದ ಸಾಧನೆ ಮೂಲಕ ಮತ ಕೇಳಲಿದ್ದಾರೆ ಎಂದು ನಾವು ಅಂದುಕೊಂಡಿದ್ದೆವು. ಆದರೆ ಅವರು 2019ರ ಭಾಷಣವನ್ನು 2024ರಲ್ಲಿ ಓದುತ್ತಿದ್ದಾರೆ. ಕಾಂಗ್ರೆಸ್‌ ಹಾಗೂ ಅದರ ನಾಯಕರ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ. ಇಷ್ಟು ವರ್ಷ ಪ್ರಧಾನಿಯಾಗಿ ಮಾಡಿದ್ದೇನು’ ಎಂದು ಸುಪ್ರಿಯಾ ಪ್ರಶ್ನಿಸಿದ್ದಾರೆ. 2004ರಲ್ಲಿ ಭಾರತ ಪ್ರಕಾಶಿಸುತ್ತಿದೆ ಎಂದು ಬಿಜೆಪಿ ಪ್ರಚಾರ ಮಾಡಿದರೂ, ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರ ಅಧಿಕಾರಕ್ಕೆ ಬರಲು ವಿಫಲವಾಗಿತ್ತು. 2024ರಲ್ಲಿಯೂ ಅದೇ ಪುನರಾವರ್ತನೆ ಆಗಲಿದೆ ಎಂದಿದ್ದಾರೆ. ಕಾಂಗ್ರೆಸ್‌ ಆಡಳಿತದ ಕರ್ನಾಟಕದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿದೆ ಎನ್ನುವ ಸುಳ್ಳನ್ನು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿದ್ದಾರೆ. 1974ರಲ್ಲಿ ನಡೆಸಿದ ಸಮೀಕ್ಷೆಯನ್ವಯ ಈ ಮೀಸಲಾತಿಯನ್ನು ಎಚ್‌.ಡಿ ದೇವೇಗೌಡರು ಮುಸ್ಲಿಮರಿಗೆ ನೀಡಿದ್ದರು. ಇಂದು ದೇವೇಗೌಡರು ಬಿಜೆಪಿ ಜೊತೆಗಿದ್ದಾರೆ. ಮೀಸಲಾತಿ ನೀಡಿದ್ದು ಕಾಂಗ್ರೆಸ್ ಪಕ್ಷ ಅಲ್ಲ. ಕಳೆದ ಮೂರು ದಶಕಗಳಿಂದಲೂ ಮೀಸಲಾತಿ ಇದೆ ಎಂದು ಸುಪ್ರಿಯಾ ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.