ನೀತಿ ಸಂಹಿತೆ ಉಲ್ಲಂಘನೆ, ಬೆದರಿಕೆ ಆರೋಪ: ಚೌಹಾಣ್ ವಿರುದ್ಧ ಕ್ರಮಕ್ಕೆ ಆಗ್ರಹ ಭೋಪಾಲ್: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ, ಪೊಲೀಸರಿಗೆ ಬೆದರಿಕೆಯೊಡ್ಡಿದ್ದ ಆರೋಪ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ. ವಿದಿಶಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಭ್ಯರ್ಥಿಯೂ ಆಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಇದೇ ವೇಳೆ ವೇದಿಕೆ ಪ್ರವೇಶಿಸಿದ್ದ ಪೊಲೀಸರು ಚೌಹಾಣ್ ಅವರ ಮೈಕ್ ಅನ್ನು ಆಫ್ ಮಾಡಿದ್ದರು. ಇದರಿಂದ ಕೆರಳಿದ ಬಿಜೆಪಿ ಶಾಸಕಯೊಬ್ಬರು ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ. ‘ರಾತ್ರಿ 10 ಗಂಟೆವರೆಗೂ ದೈನಂದಿನ ಪ್ರಚಾರಕ್ಕೆ ಗಡುವು ನೀಡಲಾಗಿತ್ತು. ಆದರೆ, ಅಧಿಕಾರಿಗಳು ಎಚ್ಚರಿಕೆ ನೀಡಿದ ಹೊರತಾಗಿಯೂ ಚೌಹಾಣ್ ಅವರು ಭಾಷಣ ಮುಂದುವರಿಸಿದ್ದರು. ಇದೇ ಸಂದರ್ಭದಲ್ಲಿ ಪೊಲೀಸರು ಚೌಹಾಣ್ ಅವರ ಮೈಕ್ ಅನ್ನು ಆಫ್ ಮಾಡಿದ್ದರು ಇದರಿಂದಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಗುರುವಾರ ರಾತ್ರಿ ನಡೆದ ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ‌‌ಹರಿದಾಡುತ್ತಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಚೌಹಾಣ್ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಚೌಹಾಣ್‌ ಅವರ ವಿರುದ್ಧ ಕಾಂಗ್ರೆಸ್‌ ಪ್ರಬಲ ಅಭ್ಯರ್ಥಿಯಾದ ಪ್ರತಾಪ್‌ ಭಾನು ಶರ್ಮಾ ಅವರನ್ನು ಸ್ಪರ್ಧೆಗಿಳಿಸಿದೆ. ಲೋಕಸಭೆಯ 543 ಕ್ಷೇತ್ರಗಳಿಗೆ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಏಪ್ರಿಲ್ 19 ಮತ್ತು ಏಪ್ರಿಲ್ 26ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.