ವಯನಾಡ್‌ನಲ್ಲಿ ಸೋಲನ್ನು ಮನಗಂಡು ರಾಯ್‌ಬರೇಲಿಯಿಂದ ರಾಹುಲ್ ಸ್ಪರ್ಧೆ: ಪಿಎಂ ಮೋದಿ ಬರ್ಧಮಾನ್: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಕಳಪೆ ಸಾಧನೆ ಮಾಡಲಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಕೇರಳದ ವಯನಾಡ್ ಕ್ಷೇತ್ರದಲ್ಲಿ ಸೋಲನ್ನು ಮನಗಂಡಿರುವ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಕಣಕ್ಕಿಳಿದಿದ್ದಾರೆ ಎಂದು ಆರೋಪಿಸಿದ್ದಾರೆ. ರಾಯ್‌ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಧಾನಿ ಮೋದಿ ಲೇವಡಿ ಮಾಡಿದರು. ಪಶ್ಚಿಮ ಬಂಗಾಳದ ಬರ್ಧಮಾನ್–ದುರ್ಗಾಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, 'ಮತಗಟ್ಟೆ ಸಮೀಕ್ಷೆಯ ಅಗತ್ಯವಿಲ್ಲ. ಕಾಂಗ್ರೆಸ್ ಸೋಲಿನ ಬಗ್ಗೆ ಹಿಂದೆಯೇ ಹೇಳಿದ್ದೆ. ಕಾಂಗ್ರೆಸ್‌ನ ಹಿರಿಯ ನಾಯಕಿ ಲೋಕಸಭಾ ಸ್ಥಾನವನ್ನು ತೊರೆದು ರಾಜಸ್ಥಾನದ ರಾಜ್ಯಸಭೆಯ ಮೂಲಕ ಸಂಸತ್ತನ್ನು ಪ್ರವೇಶಿಸಿದ್ದಾರೆ. ಕಾಂಗ್ರೆಸ್ ಸೋಲನ್ನು ಗ್ರಹಿಸಿದೆ ಎಂಬುದಕ್ಕೆ ಇದುವೇ ಸಾಕ್ಷಿ' ಎಂದು ಹೇಳಿದರು. 'ಅಮೇಠಿ ಕ್ಷೇತ್ರದಿಂದ ಪರಾಭವಗೊಂಡ ಬಳಿಕ ಕೇರಳದ ವಯನಾಡ್‌ಗೆ ಹೋಗಿದ್ದ ಕಾಂಗ್ರೆಸ್‌ನ 'ಶೆಹಜಾದ' (ರಾಜಕುಮಾರ) ಈಗ ರಾಯ್‌ಬರೇಲಿಯಿಂದ ಕಣಕ್ಕಿಳಿದಿದ್ದಾರೆ. ಈ ಬಾರಿ ವಯನಾಡ್ ಕ್ಷೇತ್ರದಿಂದಲೂ ಸೋಲಲಿದ್ದಾರೆ' ಎಂದು ಅವರು ಹೇಳಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.