ಇಡಿ ಬಂಧನ: ಹೇಮಂತ್ ಸೊರೇನ್ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ ಜಾರ್ಖಂಡ್ ರಾಂಚಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಜಾರ್ಖಂಡ್‌ ಹೈಕೋರ್ಟ್‌ ಇಂದು (ಶುಕ್ರವಾರ) ವಜಾಗೊಳಿಸಿದೆ. ಜತೆಗೆ, ಜಾಮೀನು ನಿರಾಕರಿಸಿದೆ. ಅರ್ಜಿ ವಿಚಾರಣೆ ನಡೆಸಿದ ರೊಂಗೋನ್ ಮುಖೋಪಾಧ್ಯಾಯ ನೇತೃತ್ವದ ನ್ಯಾಯಪೀಠವು, ಮೇ 6ರಂದು ನಡೆಯಲಿರುವ ತಮ್ಮ ಚಿಕ್ಕಪ್ಪನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನ್ಯಾಯಾಂಗ ಬಂಧನದಲ್ಲಿರುವ ಹೇಮಂತ್‌ ಸೊರೇನ್ ಅವರಿಗೆ ಅನುಮತಿ ನೀಡಿದೆ. ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸೊರೇನ್‌ ಅವರನ್ನು ಜನವರಿ 31ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಜಾಮೀನಿಗಾಗಿ ಸೊರೇನ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಹೈಕೋರ್ಟ್‌ ಫೆಬ್ರುವರಿ 28ರಂದು ತೀರ್ಪು ಕಾಯ್ದಿರಿಸಿತ್ತು. ಹೈಕೋರ್ಟ್‌ ತೀರ್ಪು ಪ್ರಕಟಿಸುತ್ತಿಲ್ಲ ಎಂದು ಇತ್ತೀಚೆಗೆ ಸೊರೇನ್‌ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.