ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರು ಪುನರಾಯ್ಕೆಯಾಗಿದ್ದಾರೆ. ನಾಗ್ಪುರದ ರೇಶಿಂಬಾಗ್‌ನ ಸ್ಮೃತಿ ಭವನದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಹೊಸಬಾಳೆ ಅವರನ್ನು ಭಾನುವಾರ ಪುನರಾಯ್ಕೆ ಮಾಡಲಾಗಿದೆ. 69 ವರ್ಷದ ಹೊಸಬಾಳೆ ಅವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನವರು. ಹೊಸಬಾಳೆ ಅವರು 2021ರಿಂದಲೂ ಸರಕಾರ್ಯವಾಹರಾಗಿ ಕಾರ್ಯನಿರ್ವಹಿಸುತ್ತಿದ್ದು, 2024ರಿಂದ 2027ರವರೆಗಿನ ಅವಧಿಗೆ ಮತ್ತೆ ಆಯ್ಕೆ ಮಾಡಲಾಗಿದೆ ಎಂದು ಆರ್‌ಎಸ್‌ಎಸ್‌ ‘ಎಕ್ಸ್‌’ ಮಾಧ್ಯಮದಲ್ಲಿ ಹೇಳಿದೆ. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರುವ ಅವರು, 1968ರಲ್ಲಿ ಆರ್‌ಎಸ್‌ಎಸ್‌ ಸೇರಿದ್ದರು. 1972ರಲ್ಲಿ ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು. 1978ರಲ್ಲಿ ಪ್ರಚಾರಕ್‌ ಆಗಿಯೂ ಕಾರ್ಯನಿರ್ವಹಿಸಿದ್ದರು. 2004ರಲ್ಲಿ ಆರ್‌ಎಸ್‌ಎಸ್‌ನ ಸಹ ಬೌದ್ಧಿಕ್‌ ಪ್ರಮುಖ್ ಆಗಿಯೂ ಜವಾಬ್ದಾರಿ ನಿಭಾಯಿಸಿದ್ದ ಹೊಸಬಾಳೆ ಅವರು, ‘ಅಸೀಮಾ’ ಕನ್ನಡ ಮಾಸಪತ್ರಿಕೆಯ ಸಂಸ್ಥಾಪಕ ಸಂಪಾದಕರಾಗಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.