ಲೋಕಸಭೆ ಚುನಾವಣೆ: ತೆಲಂಗಾಣದಲ್ಲಿ ಬಿಆರ್‌ಎಸ್ –ಬಿಎಸ್‌ಪಿ ಮೈತ್ರಿ ಘೋಷಣೆ ಹೈದರಾಬಾದ್: ಮುಂಬರುವ ಲೋಕಸಭೆ ಚುನಾವಣೆಗೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಹಾಗೂ ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿರುವುದಾಗಿ ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ ರಾವ್ ಇಂದು (ಶುಕ್ರವಾರ) ಘೋಷಿಸಿದ್ದಾರೆ. ‘ನಾಗರ್‌ಕರ್ನೂಲ್ ಮತ್ತು ಹೈದರಾಬಾದ್ ಲೋಕಸಭಾ ಕ್ಷೇತ್ರಗಳನ್ನು ಬಿಎಸ್‌ಪಿಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ. | . . ತೆಲಂಗಾಣದಲ್ಲಿನ ಪ್ರಮುಖ ವಿರೋಧ ಪಕ್ಷ ಬಿಆರ್‌ಎಸ್‌, ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿರುವಂತೆ ತೋರುತ್ತಿದೆ. ಬಿಆರ್‌ಎಸ್‌ನ ಅನೇಕ ನಾಯಕರು ಲೋಕಸಭೆ ಚುನಾವಣೆಗೆ ಮುನ್ನ ಪಕ್ಷ ತೊರೆದು ಆಡಳಿತಾರೂಢ ಕಾಂಗ್ರೆಸ್ ಅಥವಾ ಬಿಜೆಪಿ ಸೇರಲಾರಂಭಿಸಿದ್ದಾರೆ. ಬಿಆರ್‌ಎಸ್‌ನ ಸಂಸದರು ಈಗಾಗಲೇ ಪಕ್ಷ ತೊರೆದಿರುವುದರಿಂದ, ಬಿಆರ್‌ಎಸ್‌ನ ಶಾಸಕರು ತಾವು ಸಹ ಕಾಂಗ್ರೆಸ್ ಅಥವಾ ಬಿಜೆಪಿ ಸೇರಬೇಕೆ ಎನ್ನುವ ನಿರ್ಧಾರದ ಆಯ್ಕೆಗೆ ಲೋಕಸಭೆ ಚುನಾವಣೆ ಮುಗಿಯುವುದನ್ನು ಎದುರು ನೋಡುತ್ತಿದ್ದಾರೆ. ಚುನಾವಣಾ ಫಲಿತಾಂಶ ಹಾಗೂ ಸ್ಥಳೀಯ ವಿಷಯಗಳ ಸಮೀಕರಣಗಳನ್ನು ಆಧರಿಸಿ ಮುಂದಿನ ಹೆಜ್ಜೆ ಇರಿಸುವ ಚಿಂತನೆಯಲ್ಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಆರ್‌ಎಸ್ ಟಿಕೆಟ್‌ನಿಂದ ಸ್ಪರ್ಧಿಸಲು ಹೆಚ್ಚಿನವರು ಉತ್ಸುಕರಾಗಿಲ್ಲ ಎಂಬುದು ಗಮನಾರ್ಹ. ಒಬ್ಬ ಹಾಲಿ ಸಂಸದ ಮತ್ತು ಇನ್ನೊಬ್ಬರು ನಾಯಕರು ಎರಡು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವ ಪಕ್ಷದ ಪ್ರಸ್ತಾಪವನ್ನು ಕೆಲ ದಿನಗಳ ಹಿಂದೆ ತಿರಸ್ಕರಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.