ಒಂದು ರಾಷ್ಟ್ರ, ಒಂದು ಚುನಾವಣೆ: ಮೂವರು ನಿವೃತ್ತ ಮುಖ್ಯ ನ್ಯಾಯಮೂರ್ತಿಗಳ ವಿರೋಧ ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಲ್ಲಿಸಿದ ವರದಿಯನ್ನು ವಿರೋಧಿಸಿದವರಲ್ಲಿ ಹೈಕೋರ್ಟ್‌ನ ಮೂವರು ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಮಾಜಿ ಚುನಾವಣಾಧಿಕಾರಿ ಸೇರಿದ್ದಾರೆ. ಪ್ರಮುಖ ಹೈಕೋರ್ಟ್‌ಗಳ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಲ್ಲಿ 9 ಜನ ಏಕಕಾಲದಲ್ಲಿ ನಡೆಯುವ ಚುನಾವಣೆಯನ್ನು ಬೆಂಬಲಿಸಿದ್ದಾರೆ. ಜತೆಗೆ ಅದರ ಸಕಾರಾತ್ಮಕ ಅನುಕೂಲಗಳನ್ನು ಒತ್ತಿ ಹೇಳಿದ್ದಾರೆ. ಇತರ ಮೂವರು ತಮ್ಮ ಕಳವಳ, ತಕರಾರುಗಳನ್ನು ವ್ಯಕ್ತಪಡಿಸಿದ್ದಾರೆ. ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ, ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗಿರೀಶ್ ಚಂದ್ರ ಗುಪ್ತಾ ಹಾಗೂ ಮದ್ರಾಸ್ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಅವರು ಏಕಕಾಲದ ಚುನಾವಣೆ ಪರಿಕಲ್ಪನೆಯನ್ನು ವಿರೋಧಿಸಿದ್ದಾರೆ. ರಾಜ್ಯ ಮಾಜಿ ಚುನಾವಣಾಧಿಕಾರಿಗಳಲ್ಲಿ 7 ಮಂದಿ ಈ ವಿಚಾರವನ್ನು ಅನುಮೋದಿಸಿದರೆ, ತಮಿಳುನಾಡು ಚುನಾವಣಾ ಮಾಜಿ ಆಯುಕ್ತ ವಿ.ಪಳನಿ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಕೋವಿಂದ ನೇತೃತ್ವದ ಸಮಿತಿಯು ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ. ಮೊದಲ ಹಂತದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು. ಅದಾದ, 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.