ಸರಿಯಾದ ಸಮಯದಲ್ಲಿ ಆಯೋಗದಿಂದ ಚುನಾವಣಾ ಬಾಂಡ್‌ ಮಾಹಿತಿ ಬಹಿರಂಗ: ರಾಜೀವ್‌ ಕುಮಾರ್‌ ‌ಜಮ್ಮು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ದಿಂದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದ ಮಾಹಿತಿಯನ್ನು ಚುನಾವಣಾ ಆಯೋಗ ಪಡೆದಿದೆ. ಅದಕ್ಕೆ ಸಂಬಂಧಿಸಿದ ವಿವರವನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಿದ್ದೇವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಬುಧವಾರ ಹೇಳಿದ್ದಾರೆ. 2019ರ ಏಪ್ರಿಲ್ 12 ರಿಂದ ಖರೀದಿಸಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಈ ಸಮರ್ಥನೆ ಬಂದಿದೆ. ಸುಪ್ರೀಂ ಕೋರ್ಟ್‌ನ ಆದೇಶದಂತೆ ಮಾರ್ಚ್‌ 12 ರ ಸಂಜೆಯೊಳಗಾಗಿ ಚುನಾವಣಾ ಬಾಂಡ್‌ ಪಡೆದವರ ಮಾಹಿತಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದೆ. ವಿವರವನ್ನು ಪರಿಶೀಲಿಸಿ ಖಂಡಿತವಾಗಿಯೂ ಸರಿಯಾದ ಸಮಯದಲ್ಲಿ ಬಹಿರಂಗಪಡಿಸುತ್ತೇನೆ ಎಂದು ಅವರು ಹೇಳಿದ್ದಾರೆ. ರಾಜೀವ್‌ ಕುಮಾರ್‌ ಅವರು ಬುಧವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ತಯಾರಿಯ ಬಗ್ಗೆ ಪರಿಶೀಲನೆ ನಡೆಸಲು ತೆರಳಿದ್ದರು. ‘2024 ಲೋಕಸಭಾ ಚುನಾವಣೆಗೆ ನಾವು ಸಜ್ಜಾಗಿದ್ದೇವೆ, ದೇಶದಾದ್ಯಂತ ನ್ಯಾಯಯುತವಾಗಿ ಚುನಾವಣೆ ನಡೆಯುವಂತೆ ನೋಡಿಕೊಳ್ಳುತ್ತೇವೆ, ಜಮ್ಮು ಕಾಶ್ಮೀರ ಸೇರಿದಂತೆ ದೇಶದ ಎಲ್ಲಾ ಮತದಾರರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡು ಮತಚಲಾಯಿಸಿ’ ಎಂದು ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.