ಕೇಂದ್ರ ಸಚಿವರು, ಮಾಜಿ ಸಿಎಂಗಳು.. ಬಿಜೆಪಿ ಎರಡನೇ ಪಟ್ಟಿಯಲ್ಲಿ ಯಾರೆಲ್ಲಾ? ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ (ನಾಗ್ಪುರ) , ಪಿಯೂಷ್ ಗೋಯಲ್‌ (ಮುಂಬೈ ಉತ್ತರ), ಅನುರಾಗ್ ಸಿಂಗ್ ಠಾಕೂರ್ (ಹಮೀರ್‌ಪುರ), ಪ್ರಲ್ಹಾದ ಜೋಶಿ (ಧಾರವಾಡ) ಸೇರಿ ಪ್ರಮುಖರು ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ. ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿರುವ ಪಿಯೂಷ್ ಗೋಯಲ್ 2010ರಿಂದ ರಾಜ್ಯಸಭೆ ಸದಸ್ಯರಾಗಿದ್ದಾರೆ. ಅನುರಾಗ್‌ ಠಾಕೂರ್‌, ಪ್ರಲ್ಹಾದ ಜೋಶಿ ಹಾಗೂ ನಿತಿನ್ ಗಡ್ಕರಿ ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರದಿಂದಲೇ ಮತ್ತೊಮ್ಮೆ ಅದೃಷ್ಠ ಪರೀಕ್ಷೆಗೆ ಇಳಿಯಲಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಾವೇರಿಯಿಂದ, ಉತ್ತರಾಖಂಡ ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಹರಿದ್ವಾರದಿಂದ ಹಾಗೂ ಹರಿಯಾಣ ಮಾಜಿ ಸಿಎಂ ಮನೋಹರ್‌ಲಾಲ್ ಖಟ್ಟರ್‌ ಅವರನ್ನು ಕರ್ನಾಲ್‌ನಿಂದ ಉಮೇದುವಾರರನ್ನಾಗಿ ಮಾಡಲಾಗಿದೆ. ಎರಡನೇ ಪಟ್ಟಿಯಲ್ಲಿ ಕರ್ನಾಟಕ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಪ್ರತಾಪ ಸಿಂಹ, ನಳಿನ್ ಕುಮಾರ್ ಕಟೀಲ್, ಸದಾನಂದ ಗೌಡಗೆ ಟಿಕೆಟ್‌ ತಪ್ಪಿದೆ. ಬಿಜೆಪಿ ಮೊದಲ ಪಟ್ಟಿಯಲ್ಲಿ 195 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.