ದೆಹಲಿ | 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; ರಕ್ಷಣಾ ಕಾರ್ಯ ಆರಂಭ ದೆಹಲಿ: ದೆಹಲಿ ಜಲ ಮಂಡಳಿಯ (ಡಿಜೆಬಿ) ನೀರು ಶುದ್ಧೀಕರಣ ಘಟಕದಲ್ಲಿ ಮಗು 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ದೆಹಲಿ ಅಗ್ನಿಶಾಮಕ ದಳ (ಡಿಎಫ್‌ಎಸ್) ಜಂಟಿಯಾಗಿ ರಕ್ಷಣಾ ಕಾರ್ಯ ನಡೆಸುತ್ತಿವೆ. ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪಶ್ಚಿಮ ದೆಹಲಿಯ ಕೇಶೋಪುರ ಮಂಡಿಯ ಡಿಜೆಬಿ ಘಟಕದಲ್ಲಿ ಮಗು ಕೊಳವೆ ಬಾವಿಗೆ ಬಿದ್ದಿರುವ ಘಟನೆಯ ಬಗ್ಗೆ ಮಾಹಿತಿ ಲಭಿಸಿತು ಎಂದು ಡಿಎಫ್‌ಎಸ್ ಮುಖ್ಯಸ್ಥ ಅತುಲ್ ಗಾರ್ಗ್ ತಿಳಿಸಿದ್ದಾರೆ. ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಮಗು ಬಿದ್ದಿರುವ ಕೊಳವೆ ಬಾವಿಗೆ ಸಮಾನಾಂತರವಾಗಿ ಎನ್‌ಡಿಆರ್‌ಎಫ್ ತಂಡವು ಮತ್ತೊಂದು ಬೋರ್‌ವೆಲ್ ಕೊರೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಇದುವರೆಗೆ ಕೊಳವೆ ಬಾವಿಗೆ ಬಿದ್ದಿರುವ ಮಗುವಿನ ಗುರುತು ತಿಳಿದು ಬಂದಿಲ್ಲ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.