ಸಮಾಜವಾದಿ ಪಕ್ಷದ ಪ್ರಣಾಳಿಕೆ: ಜಾತಿಗಣತಿಗೆ ಅಸ್ತು, ಅಗ್ನಿಪಥ ರದ್ದತಿಗೆ ಒತ್ತು ಲಖನೌ(ಉತ್ತರ ಪ್ರದೇಶ): ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್, 2025ರ ವೇಳೆಗೆ ಜಾತಿಗಣತಿ ನಡೆಸುವ ಮತ್ತು ಅಗ್ನಿಪಥ ಯೋಜನೆಯನ್ನು ರದ್ದುಪಡಿಸುವ ಭರವಸೆ ನೀಡಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಪಕ್ಷದ ಪ್ರಣಾಳಿಕೆ ‘ಜಂತಾ ಕಾ ಮಾಂಗ್ ಪತ್ರ - ಹಮಾರಾ ಅಧಿಕಾರ’ ಬಿಡುಗಡೆಗೊಳಿಸಲಾಯಿತು. ಪ್ರಣಾಳಿಕೆ ಬಿಡುಗಡೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್‌, ‘2025ರ ವೇಳೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆಯಾದ ನಂತರ ದೇಶಾದಾದ್ಯಂತ ಜಾತಿ ಗಣತಿ ನಡೆಸಲಾಗುತ್ತದೆ’ ಎಂದು ಹೇಳಿದರು. ‘ಅಗ್ನಿಪಥ್‌ ಸೇನಾ ನೇಮಕಾತಿ ಯೋಜನೆಯನ್ನು ರದ್ದುಪಡಿಸಲಾಗುವುದು ಮತ್ತು ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿಯನ್ನು ಪರಿಚಯಿಸಲಾಗುವುದು’ ಎಂದರು. ಪ್ರಣಾಳಿಕೆಯಲ್ಲಿರುವ ಇತರ ಅಂಶಗಳು * ಹಳೆ ಪಿಂಚಣಿ ಪದ್ಧತಿ ಮರು ಜಾರಿ. * ರೈತರಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ, ಕೃಷಿ ಸಾಲ ಮನ್ನಾ, ಉಚಿತ ನೀರಾವರಿ ಸೌಲಭ್ಯ ಕಲ್ಪಿಸುವುದು ಮತ್ತು ರೈತ ಆಯೋಗ ರಚನೆ. * ಎಲ್ಲಾ ಭೂರಹಿತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮಾಸಿಕ ₹5 ಸಾವಿರ ಪಿಂಚಣಿ. * ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ. ಅಲ್ಲದೇ ಸರ್ಕಾರಿ ಉದ್ಯೋಗಗಳಲ್ಲಿಯೂ ಶೇ 33ರಷ್ಟು ಮೀಸಲು. * ಪ್ರತಿ ಪಡಿತರ ಚೀಟಿ ಹೊಂದಿರುವ ಕುಟುಂಬಕ್ಕೆ ₹500 ಉಚಿತ ಮೊಬೈಲ್ ಡೇಟಾ. * ಉಚಿತ ಪಡಿತರ ಭಾಗವಾಗಿ ಜನರಿಗೆ ಇಡೀ ಗೋಧಿ ಬದಲು ಗೋಧಿ ಹಿಟ್ಟು ವಿತರಣೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.