ಪಟ್ನಾ | ಜನ ವಿಶ್ವಾಸ ರ‍್ಯಾಲಿ: ರಾಹುಲ್‌, ಅಖಿಲೇಶ್‌, ಖರ್ಗೆ ಭಾಗಿ ಪಟ್ನಾ: ಬಿಹಾರ ರಾಜಧಾನಿ ಪಟ್ನಾದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಆಯೋಜಿಸಿದ್ದ ಜನ ವಿಶ್ವಾಸ ರ‍್ಯಾಲಿಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಭಾಗವಹಿಸಿದ್ದರು. ನಗರದ ಗಾಂಧಿ ಮೈದಾನದಲ್ಲಿ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಈ ರ‍್ಯಾಲಿಯು ಮುಂಬರುವ ಲೋಕಸಭಾ ಚುನಾವಣೆಗೆ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಶಕ್ತಿ ಪ್ರದರ್ಶನವಾಗಿದೆ ಎಂದು ಪಕ್ಷವು ತಿಳಿಸಿದೆ. ರ‍್ಯಾಲಿಯಲ್ಲಿ ಪಕ್ಷದ ಅಧ್ಯಕ್ಷ ಲಾಲು ಪ್ರಸಾದ್‌, ಅವರ ಪುತ್ರ ತೇಜಸ್ವಿ ಯಾದವ್‌, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಮತ್ತು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜ ಸೇರಿದಂತೆ ಉನ್ನತ ನಾಯಕರು ಉಪಸ್ಥಿತರಿದ್ದರು. ಆರ್‌ಜೆಡಿ ಜತೆಗಿನ ಮಹಾಘಟಬಂಧನ್‌ ಮೈತ್ರಿ ಮುರಿದುಕೊಂಡಿದ್ದ ನಿತೀಶ್ ಕುಮಾರ್, ಬಿಜೆಪಿ ಜತೆ ಸೇರಿಕೊಂಡು ಮತ್ತೆ ಸರ್ಕಾರ ರಚಿಸಿದ್ದರು. ಇದರಿಂದ ತೇಜಸ್ವಿ ಯಾದವ್‌ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನಷ್ಟವಾಗಿತ್ತು. ಈಗ ಜನರ ಬೆಂಬಲ ಪಡೆಯಲು ಮತ್ತು ಹೆಚ್ಚಿನ ಉದ್ಯೋಗ ಸೃಷ್ಟಿಯ ಭರವಸೆಯೊಂದಿಗೆ ಲೋಕಸಭೆ ಚುನಾವಣೆ ಎದುರಿಸಲು ಆರ್‌ಜೆಡಿ ಸಿದ್ಧತೆ ನಡೆಸುತ್ತಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.