ಎಡಪಕ್ಷಗಳೊಂದಿಗೆ ಮೈತ್ರಿ, ಆದರೆ ಕೇರಳದಲ್ಲಿ ಪ್ರತ್ಯೇಕ ಸ್ಪರ್ಧೆ: ಕಾಂಗ್ರೆಸ್ ನವದೆಹಲಿ: ನಾವು ವಿವಿಧ ರಾಜ್ಯಗಳಲ್ಲಿ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಆದರೆ ಕೇರಳದಲ್ಲಿ ಚುನಾವಣೆಯನ್ನು ಪ್ರತ್ಯೇಕವಾಗಿ ಎದುರಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. ಸಿ‍‍‍‍ಪಿಐ ‍ಪ್ರಧಾನ ಕಾರ್ಯದರ್ಶಿ ಡಿ. ರಾಜ ಅವರ ಪತ್ನಿ, ಆನಿ ರಾಜ ಅವರನ್ನು ರಾಹುಲ್ ಗಾಂಧಿ ಪ್ರತಿನಿಧಿಸುತ್ತಿರುವ ವಯನಾಡು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿರುವ ಬಗ್ಗೆ ಕಾಂಗ್ರೆಸ್‌ ಹೀಗೆ ಪ್ರತಿಕ್ರಿಯೆ ನೀಡಿದೆ. ಈ ಬಗ್ಗೆ ಕೇಳಲಾದ ‍ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಎಡ ಪಕ್ಷಗಳು ಇಂಡಿಯಾ ಮೈತ್ರಿಕೂಟದ ಬಹುದೊಡ್ಡ ಪಾಲುದಾರರು. ಅದರೆ ಇದು ರಾಜ್ಯಗಳಲ್ಲಿ, ವಿಶೇಷವಾಗಿ ಕೇರಳದಲ್ಲಿ ಪರಸ್ಪರ ಸ್ಪರ್ಧಿಸುವುದನ್ನು ತಡೆಯುವುದಿಲ್ಲ’ ಎಂದು ಹೇಳಿದರು. ವಯನಾಡು ಕ್ಷೇತ್ರಕ್ಕೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಈ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡಲಿದ್ದಾರೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ್ದ ಆನಿ ರಾಜಾ, ‘ಪ್ರತಿ ಪಕ್ಷದ ನಿರ್ಧಾರ ಅವರಿಗೆ ಬಿಟ್ಟಿದ್ದು. ಊಹಾಪೋಹದ ಆಧಾರದ ಮೇಲೆ ಯಾವುದರ ಬಗ್ಗೆಯೂ ಪ್ರತಿಕ್ರಿಯಿಸುವುದಿಲ್ಲ’ ಎಂದು ಹೇಳಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.