ಉತ್ತರ ಪ್ರದೇಶ | ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ: ಆರು ಮಂದಿ ಕಾರ್ಮಿಕರ ಸಾವು ಜೌನ್‌ಪುರ (ಉ.ಪ್ರದೇಶ): ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಬಸ್‌ವೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ರಾತ್ರಿ 11.30ರ ಸುಮಾರಿಗೆ ಸಿಕ್ರಾರಾ ಪೊಲೀಸ್‌ ಠಾಣೆ ವ್ಯಾಪ್ತಿಯ ಸಮದ್ಗಂಜ್‌ ಮಾರುಕಟ್ಟೆ ಬಳಿ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಪ್ರಯಾಗರಾಜ್‌ನಿಂದ ಡಿಯೋರಿಯಾಕ್ಕೆ ಹೋಗುತ್ತಿತ್ತು. ಈ ವೇಳೆ 12 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ. ಉಳಿದವರು ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ (ಗ್ರಾಮೀಣ) ಶೈಲೇಂದ್ರ ಸಿಂಗ್ ತಿಳಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಅಲಿಶಾಪುರ ಗ್ರಾಮದ ನಿವಾಸಿಗಳಾದ ನೀರಜ್‌ ಸರೋಜ್‌ (28), ರಾಜೇಶ್‌ ಸರೋಜ್‌ (45), ಸಂಗ್ರಾಮ್‌ ವಿಶ್ವಕರ್ಮ (25) ಸಿ. ಮುಷರ್‌ (20), ಗೋವಿಂದ್‌ ಬಿಂದ್ (30) ಮತ್ತು ಅತುಲ್‌ ಸರೋಜ್‌ (30) ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬಸ್‌ ಮತ್ತು ಟ್ರ್ಯಾಕ್ಟರ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.