ಕಾಂಗ್ರೆಸ್‌ ವಿರುದ್ಧ ಒತ್ತಾಯದ ಕ್ರಮವಿಲ್ಲ: ಆದಾಯ ತೆರಿಗೆ ಇಲಾಖೆ ನವದೆಹಲಿ: ₹3,568 ಕೋಟಿ ಮೊತ್ತದ ತರಿಗೆ ಪಾವತಿಸುವಂತೆ ಕಾಂಗ್ರೆಸ್‌ಗೆ ನೋಟಿಸ್‌ ನೀಡಿರುವ ಆದಾಯ ತೆರಿಗೆ ಇಲಾಖೆಯು (ಐಟಿ), ‘ಲೋಕಸಭಾ ಚುನಾವಣೆ ಸನ್ನಿಹಿತ ಆಗುತ್ತಿರುವುದರಿಂದ ಪಕ್ಷದ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ’ ಎಂದು ಸುಪ್ರೀಂ ಕೋರ್ಟ್‌ಗೆ ಸೋಮವಾರ ಹೇಳಿದೆ. ತೆರಿಗೆ ನೀಡುವಂತೆ ಐಟಿ ನೀಡಿರುವ ನೋಟಿಸ್‌ ಪ್ರಶ್ನಿಸಿ ಕಾಂಗ್ರೆಸ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಅಗಸ್ಟಿನ್‌ ಜಾರ್ಜ್‌ ಮಸಿಹ್ ಅವರಿದ್ದ ನ್ಯಾಯಪೀಠ ನಡೆಸಿತು. ಸಾಲಿಸಿಟರ್‌ ಜನರಲ್ ತುಷಾರ್‌ ಮೆಹ್ತಾ ಅವರು ಐಟಿ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹಾಜರಿದ್ದರು. ‘ಈ ಪ್ರಕರಣದಲ್ಲಿ ಅಂತಿಮ ತೀರ್ಪು ಹೊರಬೀಳುವವರೆಗೆ ಕಾಂಗ್ರೆಸ್‌ ವಿರುದ್ಧ ಒತ್ತಾಯದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ’ ಎಂದು ಅವರು ನ್ಯಾಯಪೀಠಕ್ಕೆ ಹೇಳಿದರು. ಈ ಅರ್ಜಿ ಸಂಬಂಧಿಸಿದಂತೆ ಮುಂದಿನ ವಿಚಾರಣೆಯನ್ನು ನ್ಯಾಯಪೀಠವು ಜುಲೈನಲ್ಲಿ ನಿಗದಿಪಡಿಸಿತು. ಆದಾಯ ತೆರಿಗೆ ಇಲಾಖೆಯ ಈ ನಡೆಯನ್ನು ಕಾಂಗ್ರೆಸ್‌ ಪರವಾಗಿ ಕೋರ್ಟ್‌ನಲ್ಲಿ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಸ್ವಾಗತಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.