ನ್ಯಾಯ ಯಾತ್ರೆ ವೇಳೆಯೂ ಸಿಎಎ ಬಗ್ಗೆ ಮಾತನಾಡದ ರಾಹುಲ್‌: ಪಿಣರಾಯಿ ವಿಜಯನ್‌ ತಿರುವನಂತಪುರ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೌನ ಕಾಪಾಡಿಕೊಂಡು ಬಂದಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಆರೋಪಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿಷಯವನ್ನು ಪಿಣರಾಯಿ ವಿಜಯನ್ ಅವರು ರಾಜಕೀಯ ದುರುದ್ದೇಶಕೋಸ್ಕರ ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಆರೋಪಿಸಿದ್ದು, ಈ ಹೇಳಿಕೆ ಬೆನ್ನಲ್ಲೇ ಪಿಣರಾಯಿ ವಿಜಯನ್ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಪಿಐ(ಎಂ) ಆಯೋಜಿಸಿದ್ದ ಸಿಎಎ ವಿರೋಧಿ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಜಯನ್, ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದಾದ್ಯಂತ ಜಾರಿಗೊಳಿಸಿದ್ದು, ಇದರ ವಿರುದ್ಧ ಭಾರತ ಜೋಡೋ ನ್ಯಾಯ ಯಾತ್ರೆಯಲ್ಲಿ ರಾಹುಲ್ ಗಾಂಧಿ ಒಂದೇ ಒಂದು ಮಾತು ಆಡಿಲ್ಲ’ ಎಂದರು. ‘ತಮ್ಮ ಯಾತ್ರೆಯ ವೇಳೆ ರಾಹುಲ್ ಗಾಂಧಿ ಈ ಬಗ್ಗೆ ಮಾತನಾಡಲಿಲ್ಲ, ಯಾತ್ರೆಯ ನಂತರ ಅವರು ಈ ಬಗ್ಗೆ ಏನನ್ನೂ ಹೇಳಲಿಲ್ಲ’ ಎಂದು ಕಿಡಿಕಾರಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.