ಕೇಜ್ರಿವಾಲ್ ಅರ್ಜಿಗೆ ಪ್ರತಿಕ್ರಿಯಿಸಲು ಮೂರು ವಾರ ಸಮಯ ಕೋರಿದ ಇ.ಡಿ ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ತಮ್ಮ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸಲು ಇನ್ನಷ್ಟು ಸಮಯ ನೀಡುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದೆ. ದೆಹಲಿ ಸರ್ಕಾರವು ಸದ್ಯ ಹಿಂಪಡೆದಿರುವ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಕೇಜ್ರಿವಾಲ್‌ ಅವರನ್ನು ಇ.ಡಿ ಅಧಿಕಾರಿಗಳು ಮಾರ್ಚ್‌ 21ರಂದು ಬಂಧಿಸಿದ್ದಾರೆ. ಇದನ್ನು ಪ್ರಶ್ನಿಸಿ ಕೇಜ್ರಿವಾಲ್‌ ಅವರು ಸೋಮವಾರ (ಮಾರ್ಚ್‌ 23 ರಂದು) ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅರ್ಜಿಯ ವಿಚಾರಣೆ ವೇಳೆ ಇ.ಡಿ. ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ. ರಾಜು, 'ವಿಸ್ತೃತವಾದ' ಅರ್ಜಿಯು ಮಂಗಳವಾರವಷ್ಟೇ ನಮ್ಮ ಕೈ ಸೇರಿದೆ. ಇದರ ಬಗ್ಗೆ ನಿಲುವು ತಿಳಿಸಲು ಮೂರು ವಾರ ಸಮಯ ನೀಡಬೇಕು ಎಂದು ಕೋರಿದ್ದಾರೆ. ಮಧ್ಯಂತರ ಜಾಮೀನು ವಿಚಾರವಾಗಿ ಪ್ರತಿಕ್ರಿಯಿಸುವುದಕ್ಕೂ ಸೂಕ್ತ ಕಾಲಾವಕಾಶ ಬೇಕಿದೆ ಎಂದಿದ್ದಾರೆ. ಇದೇ ವೇಳೆ ಎಎಪಿ ಪರ ಕೋರ್ಟ್‌ನಲ್ಲಿ ವಾದಿಸಿದ ಹಿರಿಯ ವಕೀಲ ಎ.ಎ. ಸಿಂಘ್ವಿ, ವಿಳಂಬ ತಂತ್ರ ಅನುಸರಿಸಲು ಪ್ರತಿಕ್ರಿಯಿಸಲು ಸಮಯ ಕೇಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ವಿಚಾರಣೆಯನ್ನು ಸ್ವಲ್ಪ ಸಮಯದವರೆಗೆ ಮುಂದೂಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.