ನೀತಿ ಸಂಹಿತೆ ಉಲ್ಲಂಘನೆ: ರಾಜೀವ್‌ ಚಂದ್ರಶೇಖರ್‌ ವಿರುದ್ಧ ಕ್ರಮಕ್ಕೆ ಆಗ್ರಹ ತಿರುವನಂತಪುರ: ಕೇರಳದ ತಿರುವನಂತಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್‌ ಚಂದ್ರಶೇಖರ್‌ ಅವರು ಉದ್ಘಾಟನಾ ಕಾರ್ಯಕ್ರಮ ಸೇರಿದಂತೆ ವಿವಿಧ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ಮೈತ್ರಿಕೂಟವು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ. ಈ ಕುರಿತು ಎಲ್‌ಡಿಎಫ್‌ ಮುಖಂಡರು ಶನಿವಾರ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ‘ರಾಜೀವ್‌ ಅವರು ಸ್ಪಷ್ಟವಾಗಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ’ ಎಂದು ಕ್ಷೇತ್ರದ ಎಲ್‌ಡಿಎಫ್‌ ಚುನಾವಣಾ ಸಮಿತಿ ಅಧ್ಯಕ್ಷ ಎಂ.ವಿಜಯ್‌ ಕುಮಾರ್‌ ಆರೋಪಿಸಿದರು. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕವೂ ರಾಜೀವ್‌ ಅವರು ಜನರಿಂದ ಅಹವಾಲು ಸ್ವೀಕರಿಸುತ್ತಿದ್ದಾರೆ ಎಂದೂ ವಿಜಯ್‌ ಕುಮಾರ್‌ ತಿಳಿಸಿದರು. ಮಹಿಳಾ ಕಾಲೇಜೊಂದರಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲೂ ರಾಜೀವ್‌ ಅವರು ಪಾಲ್ಗೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.