ಇ.ಡಿ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ ಕೇಜ್ರಿವಾಲ್ ನವದೆಹಲಿ: ದೆಹಲಿ ಅಬಕಾರಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ತಮ್ಮನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. ವಿಚಾರಣೆಗೆ ಕೋರ್ಟ್‌ ಒಪ್ಪಿದ ಕೆಲವೇ ಗಂಟೆಗಳಲ್ಲಿ ಅರ್ಜಿಯನ್ನು ಹಿಂಪಡೆದಿದ್ದಾರೆ. ಕೇಜ್ರಿವಾಲ್ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಅರ್ಜಿಯ ವಿಚಾರಣೆಯನ್ನು ನ್ಯಾ. ಸಂಜೀವ್ ಖನ್ನಾ ಅವರಿದ್ದ ಪೀಠದ ಮುಂದೆ ಪ್ರಸ್ತಾಪಿಸಿದರು. ಆದರೆ ವಿಚಾರಣೆ ನ್ಯಾಯಾಲಯದಲ್ಲಿ ರಿಮಾಂಡ್ ಪ್ರಕ್ರಿಯೆಗಳು ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ವಿಚಾರಣೆಯೊಂದಿಗೆ ಸಂಘರ್ಷ ಉಂಟಾಗುವುದರಿಂದ ಅರ್ಜಿಯನ್ನು ಹಿಂಪಡೆಯಲು ಅವಕಾಶ ಕೊಡಬೇಕು ಎಂದು ಪೀಠವನ್ನು ಕೋರಿದರು. ವಿಚಾರಣಾ ನ್ಯಾಯಾಲಯದಲ್ಲಿ ರಿಮಾಂಡ್ ಪ್ರಕ್ರಿಯೆಗಳು ಮುಗಿದ ಬಳಿಕ ಮತ್ತೆ ಹೊಸ ಅರ್ಜಿ ಸಲ್ಲಿಸುತ್ತೇವೆ ಎಂದು ಸಿಂಘ್ವಿ ಹೇಳಿದರು. ಇದಕ್ಕೆ ನ್ಯಾಯಮೂರ್ತಿಗಳು ಸಮ್ಮತಿಸಿರು. ತಮ್ಮನ್ನು ಬಂಧಿಸಿದ ಇ.ಡಿ ಕ್ರಮವನ್ನು ವಿರೋಧಿಸಿ ಅರವಿಂದ ಕೇಜ್ರಿವಾಲ್ ಗುರುವಾರ ರಾತ್ರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.